page1

Pages

Monday, July 25, 2011

ಜಯರಾಮ...ಬರೀ ಫ್ರೆಂಡ್ ಅಷ್ಟೇ ಆಗಿರಲಿಲ್ಲ

ನಮ್ ಲೈಬ್ರರಿ ಆಫೀಸ್ ನಲ್ಲಿ ಎಲ್ಲರಿಗೂ ನನ್ನ ಹಾಗೂ ಜಯರಾಮ್ ಫ್ರೆಂಡ್ ಶಿಪ್ ಕಂಡು ಸಕತ್ ಹೊಟ್ಟೆಕಿಚ್ಚು, ನನಗೆ ಗೆಳೆಯನಿಗಿಂತ ಹೆಚ್ಚಾಗಿ ಸ್ವಂತ ಅಣ್ಣನಂತಿದ್ದ. ಅಫೀಸ್ ನಲ್ಲೂ ಏನ್ರಿ ನಿಮ್ ಜಯರಾಮಣ್ಣ ಏನಂತಾನೇ? ಎಂದು ನನ್ನನ್ನು ಕಿಚಾಸುತ್ತಿದ್ದರು. ಆದ್ರೆ ನಾನು ಯಾರಿಗೂ ಕೇರ್ ಮಾಡ್ತಾ ಇರ್ಲಿಲ್ಲ. ನನ್ನ ವೃತ್ತಿ ಜೀವನದಲ್ಲಷ್ಟೇ ಅಲ್ಲ. ನನ್ನ ವೈಯಕ್ತಿಕ ಜೀವನದ ಏಳಿಗೆಗೂ ಜಯರಾಮಣ್ಣ ಹಲವು ರೀತಿ ಕಾರಣನಾಗಿದ್ದಾನೆ.

ಅವನ ಬಗ್ಗೆ ಹೇಳ್ತಾ ಇದ್ರೆ ಸಮಯ ಸಾಲದು. ಜಯರಾಮ ಮಂಗಳೂರು ಕಡೆಯವನು. ಸ್ವಲ್ಪ ಸಿಡುಕಿನ ಸ್ವಭಾವ, ಸ್ವಾಭಿಮಾನಿ, ಕೀಟಲೆ ಬುದ್ಧಿ ಬೇರೆ. ಅವನ ಪತ್ನಿ ರಮಾ ನಮ್ಮೂರ ಕಡೆಯವಳು. ಗಣೇಶ ಅವರ ಪುಟ್ಟ ಕೂಸು. ಅಪ್ಪನಂತೆ ತರ್ಲೆ.

ಜಯರಾಮ ಡಬ್ಬಲ್ ಡಿಗ್ರಿ ಮುಗಿಸಿದ್ದ. ನಾನು ಆಗಿನ್ನೂ ಡಿಗ್ರಿ ಮುಗಿಸಿ ಕೆಲಸಕ್ಕೆ ಸೇರಿದ್ದೆ.ನನಗೋ ಎಲ್ಲಾ ಹೊಸತು. ಕಂಪ್ಯೂಟರ್ ಗೊತ್ತಿಲ್ಲ. ಪಾಠ ಮಾಡೋ ಕಲೆನೂ ಕರಗತವಾಗಿರಲಿಲ್ಲ. ಗದ್ದೆ ನಾಟಿ ಕೆಲ್ಸ, ಮನೆ ಕೆಲಸ ಬಿಟ್ರೆ ಹಾಡು ಹಸೆ, ಕುಂಟೆಬಿಲ್ಲೆ, ಚೌಕಾಭಾರ ಅದು ಇದು ಆಡುತ್ತಾ ಬೆಳೆದವಳು. ವೃತ್ತಿ ಜೀವನಕ್ಕೆ ನಾನು ಕಾಲಿರಿಸಿದ್ದು ಕೆಲಸ ಮಾಡಿದ್ದು ಕೆಲ ವರ್ಷವಷ್ಟೇ ಎಂಬುದು ನನ್ನ ಪಾಲಿನ ಪರಮ ಸಂತೋಷದ ಸಂಗತಿ.

ಆದರೆ, ಇದ್ದಷ್ಟು ದಿನ ಜಯರಾಮನ ತಲೆ ತಿನ್ನುತ್ತಲೇ ಇದ್ದೆ. ನನ್ನ ಕಾಟ ಹೆಚ್ಚಾಗಿ ಎಷ್ಟೋ ಸಾರಿ 'ನಿ ಮನೆಗೆ ಹೋಗ್ತಿಯಾ ಸುಮ್ನೆ' ಅಂತಿದ್ದಾ.. ನಮ್ಮೂರಿಗೆ ಇರೋದು ಒಂದೇ ಬಸ್ ಅದು ಬರೋದು ಸಂಜೆನೇ ಎಂದು ಕಿಸಿತ್ತಿದ್ದೆ.

ಪ್ರತಿನಿತ್ಯ ಎಷ್ಟೇ ಕಿತ್ತಾಡಿದರೂ ಸಂಜೆ ಪಾನಿಪೂರಿ ತಿನ್ನಿಸುವುದನ್ನು ಮರೆಯುತ್ತಿರಲಿಲ್ಲ. ಇಬ್ಬರಿಗೂ ಇಷ್ಟವಾದ ಇನ್ನೊಂದು ಅಂಶ...ಮಳೆ. ಸುತ್ತಮುತ್ತ ಎಲ್ಲೆ ಮಳೆ ಹುಯ್ಯುತ್ತಲಿದ್ದರೂ ಅಲ್ಲಿ ನಾವು ಹಾಜರ್. ಕೆಲವೊಮ್ಮೆ ರಮಾ ಹಾಗೂ ಗಣೇಶನನ್ನು ಕರೆದುಕೊಂಡು ನಮ್ಮೂರ ಬಳಿ ಇದ್ದ ಪಕ್ಷಿಧಾಮಕ್ಕೆ ಮಳೆಯಲ್ಲೇ ಬಂದು ಬಿಡುತ್ತಿದ್ದ.

ಎಲ್ಲಾ ಚೆನ್ನಾಗಿತ್ತು.. ನಾನು ಕೆಲ್ಸ ಬಿಡೋ ತನಕ.. ನಾವು ಕೆಲ್ಸ ಮಾಡುತ್ತಿದ್ದ ಸಂಸ್ಥೆಗೆ ನಾನೇ ಗುಡ್ ಬೈ ಹೇಳಿದ್ನೋ ಅಥವಾ ಅವರೇ ನಿಮ್ಮ ಸೇವೆ ಸಾಕು... ಎಂದ್ರೋ ಗೊತ್ತಾಗಲಿಲ್ಲ.. ಎಲ್ಲಾ ಸಡನ್ ಆಗಿ ಬಿಡ್ತು.

ಆಮೇಲೆ ಜಯರಾಮ ಸಿಗೋದು ಕಷ್ಟ ಆಯ್ತು. ಮೊಬೈಲ್ ಇಲ್ಲದ ಕಾರಣ.. ಲ್ಯಾಂಡ್ ಲೈನ್ ಗೆ ಕರೆ ಮಾತಾಡ್ತಾ ಇದ್ದೆ. ಆದ್ರೆ ನಮ್ಮ ಆಫೀಸಿನಲ್ಲಿ ಫೋನ್ ನಲ್ಲಿ ಮಾತಾಡೋದಕ್ಕೆ ನಿರ್ಬಂಧವಿತ್ತು..ಮನೆಗೂ ಆಫೀಸಿಗೂ ಏನಿಲ್ಲ ಎಂದರೂ 15 ಕಿ.ಮೀ...

ಬರಬರುತ್ತಾ ಜಯರಾಮ ಅವನ ಕುಟುಂಬ ನೋಡೋದೆ ಕಷ್ಟ ಆಯ್ತು.. ಬೇಸಿಗೆಯಲ್ಲಾದರೆ ಒಂದಿಲ್ಲ ಒಂದು ಊಟದ ಮನೆಯಲ್ಲಿ ದರ್ಶನ ಆಗುತ್ತಿತ್ತು. ಈಗ ಮಳೆಗಾಲ..ಆಫೀಸಿಗೂ ರಜೆ.. ನನಗೋ ಕೆಲ್ಸವಿಲ್ಲದೆ ಒಂದು ರೀತಿ ಸಜೆ..ಜಯರಾಮ ಏನಾದ? ತಿಳಿಯದೇ ಮನಸ್ಸು ತೊಳಲಾಟದಲ್ಲಿತ್ತು..

ಮನಸ್ಸು ಸಂಪೂರ್ಣ ಖಾಲಿಯಾದ ಪರಿಸ್ಥಿತಿಯಲ್ಲಿ ಕಾಣಿಸಿಕೊಂಡವನೇ ನಿಶಾಂತ ನಾಯಕ.. ಹೆಸರೇ ಒಂದು ರೀತಿ ಆಕರ್ಷಣೆಯಾಗಿತ್ತು ನನಗೆ.. ನಿಶಾಂತನಿಂದ ಮನಸ್ಸಿಗೆ ಪ್ರಶಾಂತ ಸ್ಥಿತಿ ಮತ್ತೆ ಆವರಿಸಿತು.[ಸಶೇಷ]

Sunday, July 24, 2011

ಮಳೆಯ ಹನಿ ಜೊತೆ ಮರೆಯದ ಮಾಯೆಯ ಮನಸ್ಸು



ಮತ್ತೆ ಮಳೆ ಹನಿ ಸುರಿಯುತ್ತಿದೆ. ನೆನಪಿನ ಗರಿ ಒಂದೊಂದಾಗಿ ಬಿಚ್ಚ ತೊಡಗಿದೆ.

ಸುಮಾರು ಒಂದು ವರ್ಷ ಎರಡೂವರೆ ತಿಂಗಳ ನಂತರ ಬರೆಯಬೇಕೆಂಬ ಹಂಬಲ ಉಂಟಾಗಿದೆ.

ಇದಕ್ಕೆ ಮಳೆ ಹಿಮ್ಮೇಳ ಜೊತೆಗೂಡಿದೆ ಅಥವಾ ನನ್ನ ಮನಸ್ಸು ಮಳೆಗಾಲಕ್ಕೆ ಕಾದು ಕೂತ್ತಿತ್ತೋ ಗೊತ್ತಿಲ್ಲ. ಏನೋ ಇರಲಿ...

ಈಗ ಒಂದು ಕಥೆ ಹೇಳುತ್ತೇನೆ. ಸ್ನೇಹಿತರ ಕಥೆ ಅದರಲ್ಲಿ ಒಂದಿಷ್ಟು ಪ್ರೇಮ ಕಥೆಗಳು ಉಪಕಥೆಯಾಗಿ ಇಣುಕುತ್ತವೆ. ಐದಾರು ವರ್ಷಕ್ಕೂ ಹಳೆಯದಾದ ನೈಜ ಘಟನೆಗಳನ್ನು ಆಧರಿಸಿದ ಇದು ನನ್ನ ನಿಮ್ಮ ಕಥೆ ಆಗಿರಲೂ ಬಹುದು.

ಪ್ರೇಮ, ಕಾಮದ ಸೋಂಕು ತಗುಲದ ಅನ್ಯೋನ್ಯ ಗೆಳೆತನಕ್ಕೆ ಮತ್ತೊಂದು ಹೆಸರು ಎಂಬಂತ್ತಿದ್ದ, ಎಂಬಂತೆ ಇರುವ ಗೆಳೆಯ, ಗೆಳತಿಯರ ಕಥೆ..ಒಂದಿಷ್ಟು ಮುನಿಸು..

ಒಂದಿಷ್ಟು ಕಾರಣವಿಲ್ಲದ ವಿದಾಯಕ್ಕೆ ಮುನ್ನುಡಿ ಹಾಡಿದ ಸ್ನೇಹದ ಪರಿಧಿಯೊಳಗೆ ಮತ್ತೊಮ್ಮೆ ಇಳಿಯುವ ತವಕದಲ್ಲಿ ನಾನಿದ್ದೇನೆ...ಮಿಕ್ಕಿದ್ದು ನಾಳೆಗೆ....

Saturday, April 10, 2010

ತೇಜಸ್ವಿ ಬರೀ ಸ್ಮಾರಕಕ್ಕೆ ಸೀಮಿತವಾಗದಿರಲಿ!


ಅಂತೂ ಬಿಡುವು ಮಾಡಿಕೊಂಡು ಬ್ಲಾಗ್ ಗೆ ಅಂತಾ ನಾಲ್ಕು ಸಾಲು ಬರೆಯೋಣ ಅನ್ನಿಸಿತು. ಕೈಲಿ ಪೆನ್ ಹಿಡಿದು ಬಿಳಿ ಹಾಳೆ ಮೇಲೆ ಅಕ್ಷರ ಯಜ್ಞ ಮಾಡಲು ಕೂತರೆ, ಆಗ ತಾನೆ ಕೊಲ್ಲೂರಲ್ಲಿ ಅಪ್ಪನ ಕೈ ಹಿಡಿದು ಓನಾಮ ಬರೆದ ನೆನಪು ಮರುಕಳಿಸಿತು.

ಬರವಣಿಗೆ ಇರಲಿ, ಓದಿರಲಿ,ಯಾವುದೇ ಕೆಲಸವಿರಲಿ ಹೆಚ್ಚು ದಿನ ವಿರಾಮದ ನಂತರ ಮತ್ತೆ ಶುರು ಮಾಡಿದರೆ ಆಗುವ ಎಲ್ಲಾ ಅನನುಕೂಲಗಳ ಹಿನ್ನೆಲೆ ಇಟ್ಟುಕೊಂಡೇ ಬರೆಯಲು ಕೂತೆ. ಅನ್ನಿಸಿದ್ದನ್ನೆಲ್ಲ ಬರೆದು ಮುಗಿಸಿಬಿಡಬೇಕೆಂಬ ಹಂಬಲವಂತೂ ನನಗಿಲ್ಲ.

ಬರೆಯಲು ಸರಿ ಕಾರಣ ಸಿಗಲಿಲ್ಲವೆಂದರೆ ಮನಸ್ಸು ಸಹಕರಿಸುವುದಿಲ್ಲ. ಒಂದು ಸಾಲು ಸೃಷ್ಟಿಯೂಗುವುದಿಲ್ಲ. ಇರಲಿ, ಈಗ ನಮ್ಮಲ್ಲಿ ನಾಲ್ಕಾರು ದಿನದಿಂದ ಬಿಟ್ಟು ಬಿಡದಂತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಮಳೆಯ ಕಾರಣವೋ ಏನೋ ಬರೆಯುವ ಉಮೇದು ಹುಟ್ಟಿತು.

ತೇಜಸ್ವಿ ಮರೆಯಾಗಿ ೩ ವರ್ಷ ಕಳೆಯಿತು. ಮೊನ್ನೆ ಕುಪ್ಪಳಿಯಲ್ಲಿ ಸ್ಮಾರಕವೂ ಸ್ಥಾಪನೆಯಾಯಿತು. ನೆನ್ನೆ ನಾರ್ವೆ ಕಡೆ ಹೊರಟಿದ್ದವಳು ತುಸು ದೂರ ಹಾಗೆ ಮುಂದೆ ಸಾಗಿ ಸ್ಮಾರಕವನ್ನು ನೋಡಿ ಬಂದೆ. ಆಗಿಂದ ಮನದಲ್ಲಿ ಪ್ರಶ್ನೆ ಉದ್ಭವಿಸುತ್ತಲೇ ಇತ್ತು. ತೇಜಸ್ವಿಗೆ ಸ್ಮಾರಕ ಅಗತ್ಯವೇ? ಯಾವ ಪ್ರಶಸ್ತಿ, ಪಾರಿತೋಷಕ, ಹಾರ ತುರಾಯಿ, ಸ್ಮಾರಕ, ಬೆಂಬಲಿಗರ ದಂಡನ್ನು ನೆಚ್ಚಿಕೊಳ್ಳದ ಎನ್ನ ಗುರುವನ್ನು ಸ್ಮಾರಕ ಎಂಬ ಸೌಧದಲ್ಲಿ ಬಂಧಿಸುವುದು ತರವೇ ಎಂದು.

ಮೂಡಿಗೆರೆಯಲ್ಲಿ ತೇಜಸ್ವಿ ಆಶಯಗಳನ್ನು ಸಾಕಾರಗೊಳಿಸಲು ಒಂದು ಪ್ರತಿಷ್ಠಾನ ಇದೆ. ಅದು ನಿಧಾನಗತಿಯಲ್ಲಿಯಾದರೂ ತನ್ನ ಕಾರ್ಯವನ್ನು ಆರಂಭಿಸಿದೆ. ಆದರೆ, ಕುಪ್ಪಳಿಯಲ್ಲಿ ತೇಜಸ್ವಿ ಹೆಸರಿನಲ್ಲಿ ಏಳು ಬೃಹತ್ ಕಂಬಗಳನ್ನು ನೆಟ್ಟು, ಅದರ ಅರ್ಥ ವಿವರಣೆ ಕೂಡ ನೀಡದೆ, ತೇಜಸ್ವಿ ಆರಾಧಕರ ದಂಡು ನಿರ್ಮಿಸುವುದು ಸರಿಯೆ.

ಒಂದು ವಿಷಯ ನೆನಪಿರಲಿ, ತೇಜಸ್ವಿಯಲ್ಲಿ ಹತ್ತಿರದಿಂದ ಬಲ್ಲ ಆಪ್ತರಿಗಿಂತ ಹತ್ತು ಪಟ್ಟು ಹೆಚ್ಚು ಜನ ಅವರನ್ನು ಮಾನಸಿಕ ಗುರುವಾಗಿ ಭಾವಿಸಿ, ಪರಿಸರ ಸಂರಕ್ಷಣೆಯೋ, ಬರವಣಿಗೆಯೋ, ಫೋಟೋಗ್ರಾಫಿಯೋ, ತಂತ್ರಾಂಶವೋ ಮತ್ತೊಂದು ಕ್ಷೇತ್ರದಲ್ಲಿ ಅವರ ಆಶಯವನ್ನು ಪಾಲಿಸುತ್ತಾ ಬಂದಿದ್ದಾರೆ.

ಈ ಸಂಖ್ಯೆ ಬೆಳೆಯುತ್ತಲೇ ಇದೆ. ಇವರಲ್ಲಿ ಹೆಚ್ಚು ಜನ ಪ್ರತ್ಯಕ್ಷವಾಗಿ ತೇಜಸ್ವಿಯನ್ನು ದೂರದಿಂದಾದರೂ ಕಂಡವರಲ್ಲ. ಕೇವಲ ಅವರ ಬರಹಗಳ ಮೂಲಕ ಸ್ಫೂರ್ತಿ ಪಡೆದು ಸದಭಿರುಚಿ ಕಾರ್ಯಗಳಲ್ಲಿ ತೊಡಗಿಕೊಂಡವರು.

ಕಾಡಿನಲ್ಲಿ ತಾನೇ ತಾನಾಗಿ ಬೆಳೆವ ಮರಗಳ ನೆರಳನಲ್ಲಿ, ಹಕ್ಕಿಗಳ ಇಂಪಿನ ನಡುವೆ ತೇಜಸ್ವಿ ಒಂದಾಗಿ ಇರಲಿ ಎಂಬ ಉದ್ದೇಶದಿಂದ ಕುಪ್ಪಳಿಯಲ್ಲಿ ಸ್ಮಾರಕ ಸ್ಥಾಪಿಸಿದ್ದರೆ ಸರಿ. ಇಲ್ಲವಾದರೆ, ಎಲ್ಲರಂತೆ, ತೇಜಸ್ವಿ ಎಂಬ ಬ್ರಾಂಡ್ ನೇಮ್ ಹಿಂದೆ ಬಿದ್ದು, ಗಲ್ಲಿ ಗಲ್ಲಿಗೆ ಹೆಸರು ಮೂಲೆ ಮೂಲೆಗೆ ಸ್ಮಾರಕ, ಒಂದಿಷ್ಟು ಅವರ ಹೆಸರಿನಲ್ಲಿ ಪ್ರಶಸ್ತಿ, ಪುರಸ್ಕಾರ ಎಂಬಂತಾದರೆ... ಕ್ಷಮಿಸಿ, ತೇಜಸ್ವಿಗೆ ಅದು ಮಾಡುವ ಅಪಮಾನವಾದೀತು.

ಸ್ಮಾರಕ ಮಾಡಲು ಯಾರು ಬೇಡಲಿಲ್ಲ. ನಮ್ಮ ಇಷ್ಟ ನಾವು ಮಾಡಿದೆವು ಎಂದು ಅವರ ಕುಟುಂಬ, ಆಪ್ತರು ಹೇಳಬಹುದು. ಆದರೆ, ಇದು ಖಾಸಗಿ ವಿಷಯವಲ್ಲ. ಇರಲಿ, ತೇಜಸ್ವಿ ಸ್ಮಾರಕ ಸ್ಥಾಪನೆಯಾಯ್ತು ಮುಂದೇನು? ಸುತ್ತಮುತ್ತಲ ಅರಣ್ಯ ಸಂರಕ್ಷಣೆಗೆ ಸ್ಮಾರಕ ಸ್ಥಾಪಕರು ಮುಂದಾಗಬಹುದು. ಕವಿಮನೆ(ಕುವೆಂಪು ಮೂಲಮನೆ) ಯಂತೆ ತೇಜಸ್ವಿ ಹೆಸರಲ್ಲಿ ಪರ್ಣಕುಟೀರ ನಿರ್ಮಿಸಬಹುದು.

ಅಲ್ಲಿ ಅಧ್ಯಯನ ಪೀಠ ಸ್ಥಾಪಿಸಬಹುದು, ಆಗಾಗ ಸಾಂಸ್ಕೃತಿಕ ಕಾರ್ಯಕ್ರಮಗಳು, ಚರ್ಚಾಗೋಷ್ಠಿಗಳು, ತೇಜಸ್ವಿ ಆಗಿದ್ದರೂ, ಹೀಗಿದ್ದರೂ, ಹಾಗೆ ಮಾಡ್ಬೇಕು, ಹೀಗೆ ಮಾಡ್ಬೇಕು ಎಂದೆಲ್ಲಾ ಬೊಬ್ಬೆ ಹಾಕಬಹುದು. ನಿಮ್ಮ ನಿಮ್ಮ ಕಾರ್ಯಗಳನ್ನು ನಿಮ್ಮ ನಿಮ್ಮ ಚೌಕಟ್ಟಿನಲ್ಲಿ ಸರಿಯಾಗಿ ನಿಭಾಯಿಸಿದರೆ ಅಷ್ಟು ಸಾಕು. ತೇಜಸ್ವಿ ಹೆಸರಿನಲ್ಲಿ ಪೋಗ್ರಾಂ ಮಾಡಿದರೆ ಯಾವ ಪುರಷಾರ್ಥ ಸಾಧನೆಯೂ ಆಗುವುದಿಲ್ಲ.

ತೇಜಸ್ವಿ ಎಂದರೆ ಒಂದೂವರೆ ಅಡಿಪಾಯದ ಮೇಲಿನ 10 ಅಡಿ ಎತ್ತರದ 7 ಕಂಬಗಳು ಎಂದು ಆಗದಿರಲಿ. ಕಲ್ಲಿನ ಪಕ್ಕ ನಾಲ್ಕು ಮರ ನೆಟ್ಟು ಹಕ್ಕಿಗಳನ್ನು ಆಹ್ವಾನಿಸಿ, ಅಲ್ಲೊಂದು ಕಾಡಿನ ನಡುವೆ ಇರುವ ನಿಗೂಢ ಸ್ತಂಭಗಳಿಗೆ ಆಕರ್ಷಣೆ ತುಂಬುತ್ತಾ, ತುಂಬುತ್ತಾ, ಸರಿ ಆಶಯವನ್ನು ಮರೆಯುವಂತೆ ಆಗದಿರಲಿ.

ಏನಾದರೂ ಮಾಡಲೇ ಬೇಕು ಅಂತಾದರೆ, ಕಾಡು ಉಳಿಸಿ, ತೇಜಸ್ವಿ ಪುಸ್ತಕಗಳನ್ನು ಕೊಳ್ಳಿರಿ, ಪರಿಸರ ಉಳಿಸಿ, ಬೆಳಸಿ, ಮಕ್ಕಳಿಗೆ ಒಂದಿಷ್ಟು ಅರಿವು ಮೂಡಿಸಿ, ಸಾತ್ವಿಕ ಬದುಕು ಬಾಳಿರಿ, ನೀವು ಬದುಕಿ ಪರರನ್ನು ಬಾಳಿಸಿ ಅಷ್ಟು ಮಾಡಿ ಸಾಕು. ಇದ್ದಾಗ ಯಾರ ಹಿಡಿತಕ್ಕೂ ಸಿಗದ ತೇಜಸ್ವಿಯನ್ನು ಈಗ ದಯವಿಟ್ಟು ನಿಮ್ಮ ಕೈಗೊಂಬೆ ಮಾಡಿಕೊಳ್ಳಬೇಡಿ.

Saturday, April 11, 2009

ಮತ್ತದೇ ಬೇಸರ, ಅದೇ ಹುರುಪು


"ಮಲೆಸೀಮೆಯಲ್ಲಿ ಈ ಪಾಟಿ ಬಿಸಿಲು ಕಂಡಿದ್ದೇ ಇಲ್ಲಾ ಭಟ್ಟರೇ, ಎಲ್ಲಿಗಾದ್ರೂ ಹೊಗುವ ಬಂದ್ರೆ ರಣಬಿಸಿಲು ನೆತ್ತಿ ಸುಡುತ್ತೆ ?" , ಮನೆ ಮುಂದಿನ ಚಿಟ್ಟೆಯಲ್ಲಿ ವಿರಮಿಸಿದ್ದ ಮೇಗಿನ ಗದ್ದೆ ರಾಮಣ್ಣ, ಅಣ್ಣ (ಅಪ್ಪಯ್ಯ)ನ ಜೊತೆ ಹರಟುತ್ತಿದ್ದ.

ಅವನ ಮಾತಿಗೆ ಗೌಣುಹಾಕುತ್ತಾ ನನ್ನೆಡೆ ತಿರುಗಿದರು. ಅದು ರಾಮನಿಗೆ ಕಾಫಿ ಸಮಾರಾಧನೆ ಅಣಿ ಮಾಡು ಎನ್ನುವ ಸೂಚನೆ. ನಾನು ಒಳನಡೆದೆ.

ಇಬ್ಬರೂ ಮಟ ಮಟ ಮಧ್ಯಾಹ್ನ ಕಾಫಿ ಹೀರಿ ಮತ್ತೆ ಮಾತಲ್ಲೆ ಊಟ ಮುಗಿಸಿದ್ದರು. ರಾಮಣ್ಣನಿಗೆ ಬೇಸಿಗೆಯಲ್ಲಿ ಸಾಮಾನ್ಯವಾಗಿ ಓಡಾಟ ಹೆಚ್ಚು, ಅದೂ ಯುಗಾದಿ ನಂತರ ಸುಮಾರು ಶುಭ ಸಮಾರಂಭಗಳಿಗೆ ಹೇಳಿಕೆ ನೀಡುವುದು. ಚಪ್ಪರ ಹಾಕುವುದು, ಮಂಟಪ ಮಾಡುವುದರಿಂದ ಹಿಡಿದು ಎಲ್ಲಾ ಕೆಲ್ಸಗಳಲ್ಲಿ ವ್ಯಸ್ತನಾಗಿರುತ್ತಿದ್ದ.

ಹೀಗೆ ಸದಾ ಚಟುವಟಿಕೆಯ ಜೀವಿ ರಾಮಣ್ಣನಿಗೂ ಬಿಸಿಲಿನ ಝಳ ಈ ಬಾರಿ ಚುರುಕು ಮುಟ್ಟಿಸಿದ್ದಂತೂ ನಿಜ. ಚಿಕ್ಕಂದಿನಿಂದ ಆತನನ್ನು ನಾವೆಲ್ಲಾ ರಾಮಣ್ಣ ಅಂತೆಲೆ ಕರೆಯೋದು.

ಆದ್ರೆ ಆತನಿಗೆ ಏನಿಲ್ಲಾ ಅಂದ್ರೂ 45-50 ರ ಪ್ರಾಯ ಇರಬಹುದು ಅಥವಾ ಅದಕ್ಕಿಂತ ಹೆಚ್ಚಿರಬಹುದು. ಆದ್ರೆ ಆತನ ಚುರುಕುತನ ನಮ್ಮ ವಯಸ್ಸಿನವರಿಗೂ ಇಲ್ಲ. ಎಣ್ಣೆಗಂಪು ಬಣ್ಣದ ರಾಮಪ್ಪನ ಆಸ್ತಿ ಎಂದೂ ಮಾಸದ ಮುಗ್ಧ ನಗು.

ಎರಡು ಕಿವಿಗೂ ಒಂಟಿ ಧರಿಸಿ, ಸದಾ ಅದೇ ಮಾಸಿದ ಬಿಳಿ ಅಂಗಿ ಮೊಳಕಾಲಿಗಿಂತ ಮೇಲೆ ಉಟ್ಟ ಕಚ್ಚೆ ಪಂಚೆ. ಕೈಲಿ ಎಂದಿನಂತೆ ಕರಿ ಬಣ್ಣದ ಛತ್ರಿ. ಹೊಗೆಸೊಪ್ಪು ಹೊಸೆಯುತ್ತಾ ಗೊಟಡಿಕೆ ಮೆಲ್ಲುತ್ತಾ ಶೃಂಗೇರಿ, ಮೂಡಿಗೆರೆ, ಕೊಪ್ಪ, ಬಾಳೆಹೊನ್ನೂರು, ಶಿವಮೊಗ್ಗ.... ಸೀಮೆಯ ವಕ್ತಾರನಂತೆ ಸದಾ ಓಡಾಡುವ ಇವನನ್ನು ನೋಡದವರೆ ವಿರಳ.

ಸಹಕಾರ ಸಾರಿಗೆ, ನಿಸ್ಮಿತಾ, ಮಲ್ಲಿಕಾರ್ಜುನ, ಕೆಕೆಬಿ, ತುಂಗಭದ್ರಾ. ಅವಿಭಜಿತ ಶಂಕರ್ ಟ್ರಾನ್ಸ್ ಪೋರ್ಟ್ ಹೀಗೆ ಎಲ್ಲಾ ವಾಹನದಲ್ಲೂ ಡ್ರೈವರ್ ಪಕ್ಕದ ಬದಿ ಸೀಟು ಖಾಯಂ.

ಸಾಮಾನ್ಯವಾಗಿ ರಾಮಣ್ಣ ಬಸ್ ಸ್ಪಾಪ್ ಗಳಲ್ಲಿ ನಿಂತು, ಬಸ್ ಕಾಯ್ದು ಹತ್ತುತ್ತಿದ್ದದ್ದೆ ಕಮ್ಮಿ. ಮೊದಮೊದಲೆಲ್ಲಾ ಇವನು ಕೈ ಒಡ್ಡಿದ ಕಡೆಯೆಲ್ಲಾ ಬಸ್ ನಿಲ್ಲಿಸುತ್ತಿದ್ದ ಡ್ರೈವರ್ ಗಳು, ಬರಬರುತ್ತಾ ಇವನ ಕಡೆ ಉದಾಸೀನರಾಗುತ್ತಾ ಬಸ್ ಹಾಗೆ ಹೊಡೆದುಕೊಂಡು ಹೋಗತೊಡಗಿದರು.

ಆದ್ರೆ ಇವ ಬಿಡಬೇಕಲ್ಲ. ತಿಂಗಳ ಕೆಳಗೆ ಜೈಪುರದಿಂದ ಮುಂದೆ ಕಲ್ಕೆರೆಗೂ ಮುನ್ನ ಸಾಮಾನ್ಯವಾಗಿ ಕೈ ಒಡ್ಡಿ ಬಸ್ ನಿಲ್ಲಿಸುತ್ತಿದ್ದ ರಾಮಣ್ಣ, ಮುಷ್ಟಿಯಲ್ಲಿ ಕಲ್ಲು ಹಿಡಿದು ಗಣ ಬಂದ ಹಾಗೆ ಆಡುತ್ತಾ ಬಸ್ ಗೆ ಅಡ್ಡವಾಗಿ ನಿಂತ್ತಿದ್ದನಂತೆ. ಡ್ರೈವರ್ ಬ್ರೇಕ್ ಒತ್ತಿದ್ದ ರಭಸಕ್ಕೆ ಹಲವರ ಮುಸುಡಿ, ಕಿವಿ ಮೂಗುಗಳು ಜಖಂ ಆಗಿದ್ದಂತೂ ಸತ್ಯ.

ಆಮೇಲೆ ಏನೂ ಅರಿಯದವನಂತೆ ಮೆಲ್ಲಗೆ ಬಸ್ ಏರಿ ತನ್ನ ಸೀಟಿನಲ್ಲಿ ಕೂತ ರಾಮಣ್ಣನಿಗೆ ಕಂಡೆಕ್ಟರ್ ಬೈಗುಳ ಪುಷ್ಪವೃಷ್ಟಿಯಂತೆ ಅನಿಸಿ, ಎಂದಿನ ಪೆಕರು ನಗೆ ನಕ್ಕನಂತೆ. ಕಡೆಗೆ ಕಂಡೆಕ್ಟರ್ ಹಣೆ ಬಡಿದುಕೊಂಡು ಹೋದನಂತೆ.

ಈ ಬಗ್ಗೆ ಅಣ್ಣ ಪ್ರಶ್ನಿಸಿ ಯಾಕೋ ರಾಮ ಹೀಗೆಲ್ಲಾ ಮಾಡಿದೆಯಂತೆ ಅಂದ್ರೆ, "ಅಯ್ಯೋ ಬಿಡಿ ಭಟ್ಟರೆ, ಹುಡುಗು ಮುಂಡೇವು. ಅವಕ್ಕೆನೂ ಗೊತ್ತು. ಅವರಪ್ಪನ ಕಾಲದಿಂದ ನಾನು ಬಸ್ ನಲ್ಲಿ ಓಡಾಡಿದ ಸರ್ವೀಸ್ ಇದೆ ನಂಗೆ. ಒಂಚೂರು ಮರ್ಯಾದೆ ಕೊಟ್ಟು ಅಭ್ಯಾಸ ಇಲ್ಲ ಈಗೀನಾ ಮುಂಡೆವಕ್ಕೆ" ಅನ್ನೋದೆ.

ರಾಮಣ್ಣನ್ನಂತವರು ನಮ್ಮ ಸೀಮೆಯಲ್ಲಿ ಹುಡುಕಿದರೆ ನೂರು ಮಂದಿ ಸಿಗುತ್ತಾರೆ. ಆದ್ರೆ ಇತ್ತೀಚೆಗೆ ರಾಮಣ್ಣನಂಥಹ ಟಿಪಿಕಲ್ ಮಲೆನಾಡಿನ ಜೀವಿಗಳ ಬಗ್ಗೆ ಒಂದಷ್ಟು ಹೆಚ್ಚಿನ ಆಸ್ಥೆ ಮೂಡಿತ್ತು.

ಅದಕ್ಕೆ ಕಾರಣ ಇಷ್ಟೆ. ತೇಜಸ್ವಿ ಅವರ ಕಣ್ಮರೆಯ ವಿಷಾದ ರಾಗ, ಮತ್ತೆ ಇಂಥಹ ಜನ ನೋಡಿ ಮೂಡುವ ಹುರುಪು. ಕಾಲ ಎಲ್ಲವನ್ನೂ ಮರೆಸುತ್ತದೆ ಅನ್ನೋ ಮಾತನ್ನು ಕಾಲ ಎಲ್ಲವನ್ನು ಜೀವಂತ ಇರಿಸುತ್ತದೆ. ಹೀಗಲ್ಲಾದಿದ್ದರೆ ಹಾಗೆ ಎಂದು ತಿದ್ದುಕೊಳ್ಳೋದು ವಾಸಿ ಅನಿಸುತ್ತದೆ.

ತೇಜಸ್ವಿ ಮರೆತರೆ ನಮ್ಮನ್ನು ನಾವು ಮರೆತಂತೆ
ಅಕ್ಕಾ ಎಷ್ಟು ಚೆಂದಿತ್ತು ಗೊತ್ತಾ? ಮೇಷ್ಟ್ರು ಮೊದಲು ಹೇಳಿದಾಗ ನಾವು ಎಲ್ಲೋ ಇಲ್ಲಿ ಮನೆ ಹತ್ರಾ ಇರೋ ಕಾಡು ತರಾನೇ ಏನೋ ತೋರಿಸಿ ಕಳಿಸ್ತಾರೆ ಅಂತಾ ಮಾಡಿದ್ವಿ. ತೇಜಸ್ವಿ ಅಜ್ಜ ಓಡಾಡಿದ ಕಾಡಂತೆ ಕಣೆ. ಹೋಗ್ ನಿಂಗೆ ಪುಣ್ಯ ಇಲ್ಲ ಹೀಗೆ ಸಾಗಿತ್ತು ಪುಟ್ಟ ಪೋರಿಯ ಮಾತಿನ ಝರಿ..

ತೇಜಸ್ವಿ ಅವರ ನೆನಪಿನಲ್ಲಿ ಏ.5 ರಂದು ನಡೆದ ಚಾರಣ ಕಾರ್ಯಕ್ರಮಕ್ಕೆ ಹೋಗಿ ಬಂದ ಮೇಲೆ ವರ್ಷಿಣಿಯ ಸಂಭ್ರಮಕ್ಕೆ ಎಣೆಯಿಲ್ಲ. ಬರೀ ಮನೆ ಸುತ್ತಣ ಕಾಡಿನಲ್ಲಿ ನಮ್ಮ ಜೊತೆ ಅಲೆಯುತ್ತಾ ಇದ್ದ ಹುಡುಗಿಗೆ ಒಮ್ಮೇಲೆ ಹೊಸದಾದ ಸಿರಿ ಕಂಡ ಅನುಭವ.

ಮೂಡಿಗೆರೆಯ ವಿಸ್ಮಯಾ ಟ್ರಸ್ಟ್ ನ ಚಾರಣ ಕಾರ್ಯಕ್ರಮಕ್ಕೆ ಗೆಳತಿಯರೊಡನೆ ನನ್ನ ಚಿಕ್ಕನ ಮಗಳು ೧೦ ವರ್ಷದ ವರ್ಷಿಣಿ ಅಲ್ಲಲ್ಲ ವಾಕ್ ವರ್ಷಿಣಿ(ಮಾತಿನ ಮಳೆಗೆರೆಯುವವಳು ಅಹಹ್ಹಹಹಾ) ಕೂಡ ಹೋಗಿದ್ದಳು.

ಆರೋಗ್ಯ ಕೊಂಚ ಏರುಪೇರಾದ ಕಾರಣ ನೆಚ್ಚಿನ ಗುರು ತೇಜಸ್ವಿ ಅಲೆದಾಡಿದ ತಾಣಕ್ಕೆ ನಾನು ಹೋಗಲಾಗಲಿಲ್ಲ. ಆದರೆ, ವರ್ಷಿಣಿಯ ಮಾತು, ಸಂಭ್ರಮ ಆ ನೋವನ್ನು ಮರೆ ಮಾಡಿತು.

ಅಲ್ಲಿ ಪುಟ್ಟ ಪೋರಿ ಪ್ರಕೃತಿಯ ಮಡಿಲಿನಲ್ಲಿ ವಿಜ್ಞಾನಿಗಳು, ಪರಿಸರವನ್ನು ತಿಳಿದವರು, ತೇಜಸ್ವಿ ಒಡನಾಡಿಗಳ ಜೊತೆ ಏನೆಲ್ಲಾ ಕಲಿತಿರಬಹುದು. ಚಾರಣ ಮಾಡಿ, ದಿನ ನೋಡೊ ಗಿಡ ಮರ ಆದ್ರೂ ವೈಜ್ಞಾನಿಕ ದೃಷ್ಟಿಯಿಂದ ಅವುಗಳ ಬಗ್ಗೆ ಇನ್ನಷ್ಟು ತಿಳಿದಾಗ ಆಗುವ ಸಂತೋಷ ವರ್ಣಿಸಲು ಬರುವುದಿಲ್ಲ.

ಯಾರೂ ಬೇಡ ತೇಜಸ್ವಿ ಅವರ ಜೀವಂತ ಪಾತ್ರ ಬಿರಿಯಾನಿ ಕರಿಯಪ್ಪನನ್ನು ನೋಡಿದರೆ ಸಾಕು ತೇಜಸ್ವಿ ಬರೆದ ಕಥೆಗಳು ನಮಗರಿವಿಲ್ಲದಂತೆ ಕಣ್ಮುಂದೆ ಬಂದು ನಿಲ್ಲುತ್ತದೆ.

ತೇಜಸ್ವಿ ಅಗಲಿದ ನಂತರ ಅವರ ಬಗ್ಗೆ ಜನರಲ್ಲಿ ಮೂಡುತ್ತಿರುವ ಆಸಕ್ತಿ , ಆದರಗಳನ್ನು ಕಂಡರೆ ಖುಷಿಯಾಗುತ್ತದೆ. ಆದರೆ ಅದೇ ರೀತಿ ಒಂದಿಷ್ಟು ಭಯ ಕೂಡ ಆಗುತ್ತದೆ. ಯಾವ ನಿರ್ಜೀವ ಶಕ್ತಿಗೂ ನಿಲುಕದಂತಿದ್ದವರು ತೇಜಸ್ವಿ.

ಆದರೆ ಎಲ್ಲಿ ನಮ್ಮ ಜನ ತೇಜಸ್ವಿ ಎಂಬ ಬ್ರಾಂಡ್ ನೇಮ್ ಇಟ್ಟುಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೋ ಎಂಬ ಅಳುಕು ಮನದ ಮೂಲೆಯಲ್ಲಿ ಕೊರೆಯುತ್ತಿದೆ.

ಏನೇ ಆದರೂ ಪ್ರಕೃತಿಯಲ್ಲಿ ಸತ್ವವಿರುವುದಷ್ಟೇ ಉಳಿಯುವುದು. ಸರಳ ಜೀವಿಗೆ ಅಭಿಮಾನದ ಕಾಮನಬಿಲ್ಲು ಸುತ್ತಿ ಬೆಟ್ಟ ಮೇಲೆ ಕೂರಿಸಿ ಉತ್ಸವ ಮಾಡುವುದು ಅನಗತ್ಯ. ನಾವಂತೂ ನಿತ್ಯ ಕಾಯಕದಲ್ಲೇ ಮೂಡಿಗೆರೆ ಸಂತನನ್ನು ಕಾಣುತ್ತೇವೆ.
ಚಿತ್ರಗಳ ಕೃಪೆ: ದಟ್ಸ್ ಕನ್ನಡ

Saturday, March 14, 2009

ನೆಲೆ


ಇರುಳು ಕಳೆದು ಕೋಟಿ ಚುಕ್ಕಿಗಳ ಬೆಳಕಿನಿಂದ
ಮನೆ ಮನ ಬೆಳಗಿರಲು,
ಒಂಟಿತಾರೆ ದಿನಕರನ ಸಾಂಗತ್ಯವೇಕೆ?

ಬರಡು ಭೂಮಿಗೆ ನೀರುಣಿಸಿ ಸಕಲ ಚರಾಚರಕ್ಕೆ
ಜೀವಜಲವಾಗಿಹ ತುಂಗೆ ಇರಲು,
ತನ್ನೊಡಲಲ್ಲಿ ನೂರು ತುಂಗೆಯಯರನ್ನುಳ್ಳ
ಕಡಲ ಹಂಬಲವೇಕೆ?

ಗೋಳಿಮರದಿ ಕೂತ ಪುಟ್ಟ ಮಡಿವಾಳ ಹಕ್ಕಿಯ
ಇನಿದನಿ ಇಂಪಾಗಿರೆ,
ದೂರದೂರಿನ ಕೋಗಿಲೆಯ ಸ್ವರ ಆಲಿಸುವಾಸೆಯೇಕೆ?

ಮೈಮನಕೆ ಮುದ ನೀಡುವ ಪ್ರೀತಿಯ ಗುಡಿಸಿರಲು
ಕಾಣದೂರ ಹಂಗಿನರಮನೆಯ ವೈಭೋಗವೇಕೆ?
ಒಡಲಾಳದಲ್ಲಿ ಆರದ ಜ್ಞಾನಜ್ವಾಲೆ ಆವರಿಸಲು
ಉಳಿದ ಕಾಮತೃಷೆಯೇಕೆ?

ಮಲೆನಾಡಿನ ಮಗಳಾಗೆ ನಾ ಇರುವೆ, ನನ್ನ ಅಳಿವು ಉಳಿವು
ಗೆಲುವು ಸೋಲು, ನೋವು ನಲಿವಿಗೆ
ಪಂಚಭೂತಗಳೇ ಸಾಕ್ಷಿಯಾಗಿರಲಿ
ಎಲ್ಲಕ್ಕೂ ಅವುಗಳ ನೆರವಿರಲಿ, ನನ್ನಿ ಪರಿಸರ ತೊರೆಯುವ ಮುನ್ನ
ನನ್ನ ಈ ಆಕೃತಿ ಪ್ರಕೃತಿಯೊಂದಿಗೆ ಲೀನವಾಗಿರಲಿ