page1

Pages

Saturday, April 10, 2010

ತೇಜಸ್ವಿ ಬರೀ ಸ್ಮಾರಕಕ್ಕೆ ಸೀಮಿತವಾಗದಿರಲಿ!


ಅಂತೂ ಬಿಡುವು ಮಾಡಿಕೊಂಡು ಬ್ಲಾಗ್ ಗೆ ಅಂತಾ ನಾಲ್ಕು ಸಾಲು ಬರೆಯೋಣ ಅನ್ನಿಸಿತು. ಕೈಲಿ ಪೆನ್ ಹಿಡಿದು ಬಿಳಿ ಹಾಳೆ ಮೇಲೆ ಅಕ್ಷರ ಯಜ್ಞ ಮಾಡಲು ಕೂತರೆ, ಆಗ ತಾನೆ ಕೊಲ್ಲೂರಲ್ಲಿ ಅಪ್ಪನ ಕೈ ಹಿಡಿದು ಓನಾಮ ಬರೆದ ನೆನಪು ಮರುಕಳಿಸಿತು.

ಬರವಣಿಗೆ ಇರಲಿ, ಓದಿರಲಿ,ಯಾವುದೇ ಕೆಲಸವಿರಲಿ ಹೆಚ್ಚು ದಿನ ವಿರಾಮದ ನಂತರ ಮತ್ತೆ ಶುರು ಮಾಡಿದರೆ ಆಗುವ ಎಲ್ಲಾ ಅನನುಕೂಲಗಳ ಹಿನ್ನೆಲೆ ಇಟ್ಟುಕೊಂಡೇ ಬರೆಯಲು ಕೂತೆ. ಅನ್ನಿಸಿದ್ದನ್ನೆಲ್ಲ ಬರೆದು ಮುಗಿಸಿಬಿಡಬೇಕೆಂಬ ಹಂಬಲವಂತೂ ನನಗಿಲ್ಲ.

ಬರೆಯಲು ಸರಿ ಕಾರಣ ಸಿಗಲಿಲ್ಲವೆಂದರೆ ಮನಸ್ಸು ಸಹಕರಿಸುವುದಿಲ್ಲ. ಒಂದು ಸಾಲು ಸೃಷ್ಟಿಯೂಗುವುದಿಲ್ಲ. ಇರಲಿ, ಈಗ ನಮ್ಮಲ್ಲಿ ನಾಲ್ಕಾರು ದಿನದಿಂದ ಬಿಟ್ಟು ಬಿಡದಂತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಮಳೆಯ ಕಾರಣವೋ ಏನೋ ಬರೆಯುವ ಉಮೇದು ಹುಟ್ಟಿತು.

ತೇಜಸ್ವಿ ಮರೆಯಾಗಿ ೩ ವರ್ಷ ಕಳೆಯಿತು. ಮೊನ್ನೆ ಕುಪ್ಪಳಿಯಲ್ಲಿ ಸ್ಮಾರಕವೂ ಸ್ಥಾಪನೆಯಾಯಿತು. ನೆನ್ನೆ ನಾರ್ವೆ ಕಡೆ ಹೊರಟಿದ್ದವಳು ತುಸು ದೂರ ಹಾಗೆ ಮುಂದೆ ಸಾಗಿ ಸ್ಮಾರಕವನ್ನು ನೋಡಿ ಬಂದೆ. ಆಗಿಂದ ಮನದಲ್ಲಿ ಪ್ರಶ್ನೆ ಉದ್ಭವಿಸುತ್ತಲೇ ಇತ್ತು. ತೇಜಸ್ವಿಗೆ ಸ್ಮಾರಕ ಅಗತ್ಯವೇ? ಯಾವ ಪ್ರಶಸ್ತಿ, ಪಾರಿತೋಷಕ, ಹಾರ ತುರಾಯಿ, ಸ್ಮಾರಕ, ಬೆಂಬಲಿಗರ ದಂಡನ್ನು ನೆಚ್ಚಿಕೊಳ್ಳದ ಎನ್ನ ಗುರುವನ್ನು ಸ್ಮಾರಕ ಎಂಬ ಸೌಧದಲ್ಲಿ ಬಂಧಿಸುವುದು ತರವೇ ಎಂದು.

ಮೂಡಿಗೆರೆಯಲ್ಲಿ ತೇಜಸ್ವಿ ಆಶಯಗಳನ್ನು ಸಾಕಾರಗೊಳಿಸಲು ಒಂದು ಪ್ರತಿಷ್ಠಾನ ಇದೆ. ಅದು ನಿಧಾನಗತಿಯಲ್ಲಿಯಾದರೂ ತನ್ನ ಕಾರ್ಯವನ್ನು ಆರಂಭಿಸಿದೆ. ಆದರೆ, ಕುಪ್ಪಳಿಯಲ್ಲಿ ತೇಜಸ್ವಿ ಹೆಸರಿನಲ್ಲಿ ಏಳು ಬೃಹತ್ ಕಂಬಗಳನ್ನು ನೆಟ್ಟು, ಅದರ ಅರ್ಥ ವಿವರಣೆ ಕೂಡ ನೀಡದೆ, ತೇಜಸ್ವಿ ಆರಾಧಕರ ದಂಡು ನಿರ್ಮಿಸುವುದು ಸರಿಯೆ.

ಒಂದು ವಿಷಯ ನೆನಪಿರಲಿ, ತೇಜಸ್ವಿಯಲ್ಲಿ ಹತ್ತಿರದಿಂದ ಬಲ್ಲ ಆಪ್ತರಿಗಿಂತ ಹತ್ತು ಪಟ್ಟು ಹೆಚ್ಚು ಜನ ಅವರನ್ನು ಮಾನಸಿಕ ಗುರುವಾಗಿ ಭಾವಿಸಿ, ಪರಿಸರ ಸಂರಕ್ಷಣೆಯೋ, ಬರವಣಿಗೆಯೋ, ಫೋಟೋಗ್ರಾಫಿಯೋ, ತಂತ್ರಾಂಶವೋ ಮತ್ತೊಂದು ಕ್ಷೇತ್ರದಲ್ಲಿ ಅವರ ಆಶಯವನ್ನು ಪಾಲಿಸುತ್ತಾ ಬಂದಿದ್ದಾರೆ.

ಈ ಸಂಖ್ಯೆ ಬೆಳೆಯುತ್ತಲೇ ಇದೆ. ಇವರಲ್ಲಿ ಹೆಚ್ಚು ಜನ ಪ್ರತ್ಯಕ್ಷವಾಗಿ ತೇಜಸ್ವಿಯನ್ನು ದೂರದಿಂದಾದರೂ ಕಂಡವರಲ್ಲ. ಕೇವಲ ಅವರ ಬರಹಗಳ ಮೂಲಕ ಸ್ಫೂರ್ತಿ ಪಡೆದು ಸದಭಿರುಚಿ ಕಾರ್ಯಗಳಲ್ಲಿ ತೊಡಗಿಕೊಂಡವರು.

ಕಾಡಿನಲ್ಲಿ ತಾನೇ ತಾನಾಗಿ ಬೆಳೆವ ಮರಗಳ ನೆರಳನಲ್ಲಿ, ಹಕ್ಕಿಗಳ ಇಂಪಿನ ನಡುವೆ ತೇಜಸ್ವಿ ಒಂದಾಗಿ ಇರಲಿ ಎಂಬ ಉದ್ದೇಶದಿಂದ ಕುಪ್ಪಳಿಯಲ್ಲಿ ಸ್ಮಾರಕ ಸ್ಥಾಪಿಸಿದ್ದರೆ ಸರಿ. ಇಲ್ಲವಾದರೆ, ಎಲ್ಲರಂತೆ, ತೇಜಸ್ವಿ ಎಂಬ ಬ್ರಾಂಡ್ ನೇಮ್ ಹಿಂದೆ ಬಿದ್ದು, ಗಲ್ಲಿ ಗಲ್ಲಿಗೆ ಹೆಸರು ಮೂಲೆ ಮೂಲೆಗೆ ಸ್ಮಾರಕ, ಒಂದಿಷ್ಟು ಅವರ ಹೆಸರಿನಲ್ಲಿ ಪ್ರಶಸ್ತಿ, ಪುರಸ್ಕಾರ ಎಂಬಂತಾದರೆ... ಕ್ಷಮಿಸಿ, ತೇಜಸ್ವಿಗೆ ಅದು ಮಾಡುವ ಅಪಮಾನವಾದೀತು.

ಸ್ಮಾರಕ ಮಾಡಲು ಯಾರು ಬೇಡಲಿಲ್ಲ. ನಮ್ಮ ಇಷ್ಟ ನಾವು ಮಾಡಿದೆವು ಎಂದು ಅವರ ಕುಟುಂಬ, ಆಪ್ತರು ಹೇಳಬಹುದು. ಆದರೆ, ಇದು ಖಾಸಗಿ ವಿಷಯವಲ್ಲ. ಇರಲಿ, ತೇಜಸ್ವಿ ಸ್ಮಾರಕ ಸ್ಥಾಪನೆಯಾಯ್ತು ಮುಂದೇನು? ಸುತ್ತಮುತ್ತಲ ಅರಣ್ಯ ಸಂರಕ್ಷಣೆಗೆ ಸ್ಮಾರಕ ಸ್ಥಾಪಕರು ಮುಂದಾಗಬಹುದು. ಕವಿಮನೆ(ಕುವೆಂಪು ಮೂಲಮನೆ) ಯಂತೆ ತೇಜಸ್ವಿ ಹೆಸರಲ್ಲಿ ಪರ್ಣಕುಟೀರ ನಿರ್ಮಿಸಬಹುದು.

ಅಲ್ಲಿ ಅಧ್ಯಯನ ಪೀಠ ಸ್ಥಾಪಿಸಬಹುದು, ಆಗಾಗ ಸಾಂಸ್ಕೃತಿಕ ಕಾರ್ಯಕ್ರಮಗಳು, ಚರ್ಚಾಗೋಷ್ಠಿಗಳು, ತೇಜಸ್ವಿ ಆಗಿದ್ದರೂ, ಹೀಗಿದ್ದರೂ, ಹಾಗೆ ಮಾಡ್ಬೇಕು, ಹೀಗೆ ಮಾಡ್ಬೇಕು ಎಂದೆಲ್ಲಾ ಬೊಬ್ಬೆ ಹಾಕಬಹುದು. ನಿಮ್ಮ ನಿಮ್ಮ ಕಾರ್ಯಗಳನ್ನು ನಿಮ್ಮ ನಿಮ್ಮ ಚೌಕಟ್ಟಿನಲ್ಲಿ ಸರಿಯಾಗಿ ನಿಭಾಯಿಸಿದರೆ ಅಷ್ಟು ಸಾಕು. ತೇಜಸ್ವಿ ಹೆಸರಿನಲ್ಲಿ ಪೋಗ್ರಾಂ ಮಾಡಿದರೆ ಯಾವ ಪುರಷಾರ್ಥ ಸಾಧನೆಯೂ ಆಗುವುದಿಲ್ಲ.

ತೇಜಸ್ವಿ ಎಂದರೆ ಒಂದೂವರೆ ಅಡಿಪಾಯದ ಮೇಲಿನ 10 ಅಡಿ ಎತ್ತರದ 7 ಕಂಬಗಳು ಎಂದು ಆಗದಿರಲಿ. ಕಲ್ಲಿನ ಪಕ್ಕ ನಾಲ್ಕು ಮರ ನೆಟ್ಟು ಹಕ್ಕಿಗಳನ್ನು ಆಹ್ವಾನಿಸಿ, ಅಲ್ಲೊಂದು ಕಾಡಿನ ನಡುವೆ ಇರುವ ನಿಗೂಢ ಸ್ತಂಭಗಳಿಗೆ ಆಕರ್ಷಣೆ ತುಂಬುತ್ತಾ, ತುಂಬುತ್ತಾ, ಸರಿ ಆಶಯವನ್ನು ಮರೆಯುವಂತೆ ಆಗದಿರಲಿ.

ಏನಾದರೂ ಮಾಡಲೇ ಬೇಕು ಅಂತಾದರೆ, ಕಾಡು ಉಳಿಸಿ, ತೇಜಸ್ವಿ ಪುಸ್ತಕಗಳನ್ನು ಕೊಳ್ಳಿರಿ, ಪರಿಸರ ಉಳಿಸಿ, ಬೆಳಸಿ, ಮಕ್ಕಳಿಗೆ ಒಂದಿಷ್ಟು ಅರಿವು ಮೂಡಿಸಿ, ಸಾತ್ವಿಕ ಬದುಕು ಬಾಳಿರಿ, ನೀವು ಬದುಕಿ ಪರರನ್ನು ಬಾಳಿಸಿ ಅಷ್ಟು ಮಾಡಿ ಸಾಕು. ಇದ್ದಾಗ ಯಾರ ಹಿಡಿತಕ್ಕೂ ಸಿಗದ ತೇಜಸ್ವಿಯನ್ನು ಈಗ ದಯವಿಟ್ಟು ನಿಮ್ಮ ಕೈಗೊಂಬೆ ಮಾಡಿಕೊಳ್ಳಬೇಡಿ.

Saturday, April 11, 2009

ಮತ್ತದೇ ಬೇಸರ, ಅದೇ ಹುರುಪು


"ಮಲೆಸೀಮೆಯಲ್ಲಿ ಈ ಪಾಟಿ ಬಿಸಿಲು ಕಂಡಿದ್ದೇ ಇಲ್ಲಾ ಭಟ್ಟರೇ, ಎಲ್ಲಿಗಾದ್ರೂ ಹೊಗುವ ಬಂದ್ರೆ ರಣಬಿಸಿಲು ನೆತ್ತಿ ಸುಡುತ್ತೆ ?" , ಮನೆ ಮುಂದಿನ ಚಿಟ್ಟೆಯಲ್ಲಿ ವಿರಮಿಸಿದ್ದ ಮೇಗಿನ ಗದ್ದೆ ರಾಮಣ್ಣ, ಅಣ್ಣ (ಅಪ್ಪಯ್ಯ)ನ ಜೊತೆ ಹರಟುತ್ತಿದ್ದ.

ಅವನ ಮಾತಿಗೆ ಗೌಣುಹಾಕುತ್ತಾ ನನ್ನೆಡೆ ತಿರುಗಿದರು. ಅದು ರಾಮನಿಗೆ ಕಾಫಿ ಸಮಾರಾಧನೆ ಅಣಿ ಮಾಡು ಎನ್ನುವ ಸೂಚನೆ. ನಾನು ಒಳನಡೆದೆ.

ಇಬ್ಬರೂ ಮಟ ಮಟ ಮಧ್ಯಾಹ್ನ ಕಾಫಿ ಹೀರಿ ಮತ್ತೆ ಮಾತಲ್ಲೆ ಊಟ ಮುಗಿಸಿದ್ದರು. ರಾಮಣ್ಣನಿಗೆ ಬೇಸಿಗೆಯಲ್ಲಿ ಸಾಮಾನ್ಯವಾಗಿ ಓಡಾಟ ಹೆಚ್ಚು, ಅದೂ ಯುಗಾದಿ ನಂತರ ಸುಮಾರು ಶುಭ ಸಮಾರಂಭಗಳಿಗೆ ಹೇಳಿಕೆ ನೀಡುವುದು. ಚಪ್ಪರ ಹಾಕುವುದು, ಮಂಟಪ ಮಾಡುವುದರಿಂದ ಹಿಡಿದು ಎಲ್ಲಾ ಕೆಲ್ಸಗಳಲ್ಲಿ ವ್ಯಸ್ತನಾಗಿರುತ್ತಿದ್ದ.

ಹೀಗೆ ಸದಾ ಚಟುವಟಿಕೆಯ ಜೀವಿ ರಾಮಣ್ಣನಿಗೂ ಬಿಸಿಲಿನ ಝಳ ಈ ಬಾರಿ ಚುರುಕು ಮುಟ್ಟಿಸಿದ್ದಂತೂ ನಿಜ. ಚಿಕ್ಕಂದಿನಿಂದ ಆತನನ್ನು ನಾವೆಲ್ಲಾ ರಾಮಣ್ಣ ಅಂತೆಲೆ ಕರೆಯೋದು.

ಆದ್ರೆ ಆತನಿಗೆ ಏನಿಲ್ಲಾ ಅಂದ್ರೂ 45-50 ರ ಪ್ರಾಯ ಇರಬಹುದು ಅಥವಾ ಅದಕ್ಕಿಂತ ಹೆಚ್ಚಿರಬಹುದು. ಆದ್ರೆ ಆತನ ಚುರುಕುತನ ನಮ್ಮ ವಯಸ್ಸಿನವರಿಗೂ ಇಲ್ಲ. ಎಣ್ಣೆಗಂಪು ಬಣ್ಣದ ರಾಮಪ್ಪನ ಆಸ್ತಿ ಎಂದೂ ಮಾಸದ ಮುಗ್ಧ ನಗು.

ಎರಡು ಕಿವಿಗೂ ಒಂಟಿ ಧರಿಸಿ, ಸದಾ ಅದೇ ಮಾಸಿದ ಬಿಳಿ ಅಂಗಿ ಮೊಳಕಾಲಿಗಿಂತ ಮೇಲೆ ಉಟ್ಟ ಕಚ್ಚೆ ಪಂಚೆ. ಕೈಲಿ ಎಂದಿನಂತೆ ಕರಿ ಬಣ್ಣದ ಛತ್ರಿ. ಹೊಗೆಸೊಪ್ಪು ಹೊಸೆಯುತ್ತಾ ಗೊಟಡಿಕೆ ಮೆಲ್ಲುತ್ತಾ ಶೃಂಗೇರಿ, ಮೂಡಿಗೆರೆ, ಕೊಪ್ಪ, ಬಾಳೆಹೊನ್ನೂರು, ಶಿವಮೊಗ್ಗ.... ಸೀಮೆಯ ವಕ್ತಾರನಂತೆ ಸದಾ ಓಡಾಡುವ ಇವನನ್ನು ನೋಡದವರೆ ವಿರಳ.

ಸಹಕಾರ ಸಾರಿಗೆ, ನಿಸ್ಮಿತಾ, ಮಲ್ಲಿಕಾರ್ಜುನ, ಕೆಕೆಬಿ, ತುಂಗಭದ್ರಾ. ಅವಿಭಜಿತ ಶಂಕರ್ ಟ್ರಾನ್ಸ್ ಪೋರ್ಟ್ ಹೀಗೆ ಎಲ್ಲಾ ವಾಹನದಲ್ಲೂ ಡ್ರೈವರ್ ಪಕ್ಕದ ಬದಿ ಸೀಟು ಖಾಯಂ.

ಸಾಮಾನ್ಯವಾಗಿ ರಾಮಣ್ಣ ಬಸ್ ಸ್ಪಾಪ್ ಗಳಲ್ಲಿ ನಿಂತು, ಬಸ್ ಕಾಯ್ದು ಹತ್ತುತ್ತಿದ್ದದ್ದೆ ಕಮ್ಮಿ. ಮೊದಮೊದಲೆಲ್ಲಾ ಇವನು ಕೈ ಒಡ್ಡಿದ ಕಡೆಯೆಲ್ಲಾ ಬಸ್ ನಿಲ್ಲಿಸುತ್ತಿದ್ದ ಡ್ರೈವರ್ ಗಳು, ಬರಬರುತ್ತಾ ಇವನ ಕಡೆ ಉದಾಸೀನರಾಗುತ್ತಾ ಬಸ್ ಹಾಗೆ ಹೊಡೆದುಕೊಂಡು ಹೋಗತೊಡಗಿದರು.

ಆದ್ರೆ ಇವ ಬಿಡಬೇಕಲ್ಲ. ತಿಂಗಳ ಕೆಳಗೆ ಜೈಪುರದಿಂದ ಮುಂದೆ ಕಲ್ಕೆರೆಗೂ ಮುನ್ನ ಸಾಮಾನ್ಯವಾಗಿ ಕೈ ಒಡ್ಡಿ ಬಸ್ ನಿಲ್ಲಿಸುತ್ತಿದ್ದ ರಾಮಣ್ಣ, ಮುಷ್ಟಿಯಲ್ಲಿ ಕಲ್ಲು ಹಿಡಿದು ಗಣ ಬಂದ ಹಾಗೆ ಆಡುತ್ತಾ ಬಸ್ ಗೆ ಅಡ್ಡವಾಗಿ ನಿಂತ್ತಿದ್ದನಂತೆ. ಡ್ರೈವರ್ ಬ್ರೇಕ್ ಒತ್ತಿದ್ದ ರಭಸಕ್ಕೆ ಹಲವರ ಮುಸುಡಿ, ಕಿವಿ ಮೂಗುಗಳು ಜಖಂ ಆಗಿದ್ದಂತೂ ಸತ್ಯ.

ಆಮೇಲೆ ಏನೂ ಅರಿಯದವನಂತೆ ಮೆಲ್ಲಗೆ ಬಸ್ ಏರಿ ತನ್ನ ಸೀಟಿನಲ್ಲಿ ಕೂತ ರಾಮಣ್ಣನಿಗೆ ಕಂಡೆಕ್ಟರ್ ಬೈಗುಳ ಪುಷ್ಪವೃಷ್ಟಿಯಂತೆ ಅನಿಸಿ, ಎಂದಿನ ಪೆಕರು ನಗೆ ನಕ್ಕನಂತೆ. ಕಡೆಗೆ ಕಂಡೆಕ್ಟರ್ ಹಣೆ ಬಡಿದುಕೊಂಡು ಹೋದನಂತೆ.

ಈ ಬಗ್ಗೆ ಅಣ್ಣ ಪ್ರಶ್ನಿಸಿ ಯಾಕೋ ರಾಮ ಹೀಗೆಲ್ಲಾ ಮಾಡಿದೆಯಂತೆ ಅಂದ್ರೆ, "ಅಯ್ಯೋ ಬಿಡಿ ಭಟ್ಟರೆ, ಹುಡುಗು ಮುಂಡೇವು. ಅವಕ್ಕೆನೂ ಗೊತ್ತು. ಅವರಪ್ಪನ ಕಾಲದಿಂದ ನಾನು ಬಸ್ ನಲ್ಲಿ ಓಡಾಡಿದ ಸರ್ವೀಸ್ ಇದೆ ನಂಗೆ. ಒಂಚೂರು ಮರ್ಯಾದೆ ಕೊಟ್ಟು ಅಭ್ಯಾಸ ಇಲ್ಲ ಈಗೀನಾ ಮುಂಡೆವಕ್ಕೆ" ಅನ್ನೋದೆ.

ರಾಮಣ್ಣನ್ನಂತವರು ನಮ್ಮ ಸೀಮೆಯಲ್ಲಿ ಹುಡುಕಿದರೆ ನೂರು ಮಂದಿ ಸಿಗುತ್ತಾರೆ. ಆದ್ರೆ ಇತ್ತೀಚೆಗೆ ರಾಮಣ್ಣನಂಥಹ ಟಿಪಿಕಲ್ ಮಲೆನಾಡಿನ ಜೀವಿಗಳ ಬಗ್ಗೆ ಒಂದಷ್ಟು ಹೆಚ್ಚಿನ ಆಸ್ಥೆ ಮೂಡಿತ್ತು.

ಅದಕ್ಕೆ ಕಾರಣ ಇಷ್ಟೆ. ತೇಜಸ್ವಿ ಅವರ ಕಣ್ಮರೆಯ ವಿಷಾದ ರಾಗ, ಮತ್ತೆ ಇಂಥಹ ಜನ ನೋಡಿ ಮೂಡುವ ಹುರುಪು. ಕಾಲ ಎಲ್ಲವನ್ನೂ ಮರೆಸುತ್ತದೆ ಅನ್ನೋ ಮಾತನ್ನು ಕಾಲ ಎಲ್ಲವನ್ನು ಜೀವಂತ ಇರಿಸುತ್ತದೆ. ಹೀಗಲ್ಲಾದಿದ್ದರೆ ಹಾಗೆ ಎಂದು ತಿದ್ದುಕೊಳ್ಳೋದು ವಾಸಿ ಅನಿಸುತ್ತದೆ.

ತೇಜಸ್ವಿ ಮರೆತರೆ ನಮ್ಮನ್ನು ನಾವು ಮರೆತಂತೆ
ಅಕ್ಕಾ ಎಷ್ಟು ಚೆಂದಿತ್ತು ಗೊತ್ತಾ? ಮೇಷ್ಟ್ರು ಮೊದಲು ಹೇಳಿದಾಗ ನಾವು ಎಲ್ಲೋ ಇಲ್ಲಿ ಮನೆ ಹತ್ರಾ ಇರೋ ಕಾಡು ತರಾನೇ ಏನೋ ತೋರಿಸಿ ಕಳಿಸ್ತಾರೆ ಅಂತಾ ಮಾಡಿದ್ವಿ. ತೇಜಸ್ವಿ ಅಜ್ಜ ಓಡಾಡಿದ ಕಾಡಂತೆ ಕಣೆ. ಹೋಗ್ ನಿಂಗೆ ಪುಣ್ಯ ಇಲ್ಲ ಹೀಗೆ ಸಾಗಿತ್ತು ಪುಟ್ಟ ಪೋರಿಯ ಮಾತಿನ ಝರಿ..

ತೇಜಸ್ವಿ ಅವರ ನೆನಪಿನಲ್ಲಿ ಏ.5 ರಂದು ನಡೆದ ಚಾರಣ ಕಾರ್ಯಕ್ರಮಕ್ಕೆ ಹೋಗಿ ಬಂದ ಮೇಲೆ ವರ್ಷಿಣಿಯ ಸಂಭ್ರಮಕ್ಕೆ ಎಣೆಯಿಲ್ಲ. ಬರೀ ಮನೆ ಸುತ್ತಣ ಕಾಡಿನಲ್ಲಿ ನಮ್ಮ ಜೊತೆ ಅಲೆಯುತ್ತಾ ಇದ್ದ ಹುಡುಗಿಗೆ ಒಮ್ಮೇಲೆ ಹೊಸದಾದ ಸಿರಿ ಕಂಡ ಅನುಭವ.

ಮೂಡಿಗೆರೆಯ ವಿಸ್ಮಯಾ ಟ್ರಸ್ಟ್ ನ ಚಾರಣ ಕಾರ್ಯಕ್ರಮಕ್ಕೆ ಗೆಳತಿಯರೊಡನೆ ನನ್ನ ಚಿಕ್ಕನ ಮಗಳು ೧೦ ವರ್ಷದ ವರ್ಷಿಣಿ ಅಲ್ಲಲ್ಲ ವಾಕ್ ವರ್ಷಿಣಿ(ಮಾತಿನ ಮಳೆಗೆರೆಯುವವಳು ಅಹಹ್ಹಹಹಾ) ಕೂಡ ಹೋಗಿದ್ದಳು.

ಆರೋಗ್ಯ ಕೊಂಚ ಏರುಪೇರಾದ ಕಾರಣ ನೆಚ್ಚಿನ ಗುರು ತೇಜಸ್ವಿ ಅಲೆದಾಡಿದ ತಾಣಕ್ಕೆ ನಾನು ಹೋಗಲಾಗಲಿಲ್ಲ. ಆದರೆ, ವರ್ಷಿಣಿಯ ಮಾತು, ಸಂಭ್ರಮ ಆ ನೋವನ್ನು ಮರೆ ಮಾಡಿತು.

ಅಲ್ಲಿ ಪುಟ್ಟ ಪೋರಿ ಪ್ರಕೃತಿಯ ಮಡಿಲಿನಲ್ಲಿ ವಿಜ್ಞಾನಿಗಳು, ಪರಿಸರವನ್ನು ತಿಳಿದವರು, ತೇಜಸ್ವಿ ಒಡನಾಡಿಗಳ ಜೊತೆ ಏನೆಲ್ಲಾ ಕಲಿತಿರಬಹುದು. ಚಾರಣ ಮಾಡಿ, ದಿನ ನೋಡೊ ಗಿಡ ಮರ ಆದ್ರೂ ವೈಜ್ಞಾನಿಕ ದೃಷ್ಟಿಯಿಂದ ಅವುಗಳ ಬಗ್ಗೆ ಇನ್ನಷ್ಟು ತಿಳಿದಾಗ ಆಗುವ ಸಂತೋಷ ವರ್ಣಿಸಲು ಬರುವುದಿಲ್ಲ.

ಯಾರೂ ಬೇಡ ತೇಜಸ್ವಿ ಅವರ ಜೀವಂತ ಪಾತ್ರ ಬಿರಿಯಾನಿ ಕರಿಯಪ್ಪನನ್ನು ನೋಡಿದರೆ ಸಾಕು ತೇಜಸ್ವಿ ಬರೆದ ಕಥೆಗಳು ನಮಗರಿವಿಲ್ಲದಂತೆ ಕಣ್ಮುಂದೆ ಬಂದು ನಿಲ್ಲುತ್ತದೆ.

ತೇಜಸ್ವಿ ಅಗಲಿದ ನಂತರ ಅವರ ಬಗ್ಗೆ ಜನರಲ್ಲಿ ಮೂಡುತ್ತಿರುವ ಆಸಕ್ತಿ , ಆದರಗಳನ್ನು ಕಂಡರೆ ಖುಷಿಯಾಗುತ್ತದೆ. ಆದರೆ ಅದೇ ರೀತಿ ಒಂದಿಷ್ಟು ಭಯ ಕೂಡ ಆಗುತ್ತದೆ. ಯಾವ ನಿರ್ಜೀವ ಶಕ್ತಿಗೂ ನಿಲುಕದಂತಿದ್ದವರು ತೇಜಸ್ವಿ.

ಆದರೆ ಎಲ್ಲಿ ನಮ್ಮ ಜನ ತೇಜಸ್ವಿ ಎಂಬ ಬ್ರಾಂಡ್ ನೇಮ್ ಇಟ್ಟುಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೋ ಎಂಬ ಅಳುಕು ಮನದ ಮೂಲೆಯಲ್ಲಿ ಕೊರೆಯುತ್ತಿದೆ.

ಏನೇ ಆದರೂ ಪ್ರಕೃತಿಯಲ್ಲಿ ಸತ್ವವಿರುವುದಷ್ಟೇ ಉಳಿಯುವುದು. ಸರಳ ಜೀವಿಗೆ ಅಭಿಮಾನದ ಕಾಮನಬಿಲ್ಲು ಸುತ್ತಿ ಬೆಟ್ಟ ಮೇಲೆ ಕೂರಿಸಿ ಉತ್ಸವ ಮಾಡುವುದು ಅನಗತ್ಯ. ನಾವಂತೂ ನಿತ್ಯ ಕಾಯಕದಲ್ಲೇ ಮೂಡಿಗೆರೆ ಸಂತನನ್ನು ಕಾಣುತ್ತೇವೆ.
ಚಿತ್ರಗಳ ಕೃಪೆ: ದಟ್ಸ್ ಕನ್ನಡ

Saturday, March 14, 2009

ನೆಲೆ


ಇರುಳು ಕಳೆದು ಕೋಟಿ ಚುಕ್ಕಿಗಳ ಬೆಳಕಿನಿಂದ
ಮನೆ ಮನ ಬೆಳಗಿರಲು,
ಒಂಟಿತಾರೆ ದಿನಕರನ ಸಾಂಗತ್ಯವೇಕೆ?

ಬರಡು ಭೂಮಿಗೆ ನೀರುಣಿಸಿ ಸಕಲ ಚರಾಚರಕ್ಕೆ
ಜೀವಜಲವಾಗಿಹ ತುಂಗೆ ಇರಲು,
ತನ್ನೊಡಲಲ್ಲಿ ನೂರು ತುಂಗೆಯಯರನ್ನುಳ್ಳ
ಕಡಲ ಹಂಬಲವೇಕೆ?

ಗೋಳಿಮರದಿ ಕೂತ ಪುಟ್ಟ ಮಡಿವಾಳ ಹಕ್ಕಿಯ
ಇನಿದನಿ ಇಂಪಾಗಿರೆ,
ದೂರದೂರಿನ ಕೋಗಿಲೆಯ ಸ್ವರ ಆಲಿಸುವಾಸೆಯೇಕೆ?

ಮೈಮನಕೆ ಮುದ ನೀಡುವ ಪ್ರೀತಿಯ ಗುಡಿಸಿರಲು
ಕಾಣದೂರ ಹಂಗಿನರಮನೆಯ ವೈಭೋಗವೇಕೆ?
ಒಡಲಾಳದಲ್ಲಿ ಆರದ ಜ್ಞಾನಜ್ವಾಲೆ ಆವರಿಸಲು
ಉಳಿದ ಕಾಮತೃಷೆಯೇಕೆ?

ಮಲೆನಾಡಿನ ಮಗಳಾಗೆ ನಾ ಇರುವೆ, ನನ್ನ ಅಳಿವು ಉಳಿವು
ಗೆಲುವು ಸೋಲು, ನೋವು ನಲಿವಿಗೆ
ಪಂಚಭೂತಗಳೇ ಸಾಕ್ಷಿಯಾಗಿರಲಿ
ಎಲ್ಲಕ್ಕೂ ಅವುಗಳ ನೆರವಿರಲಿ, ನನ್ನಿ ಪರಿಸರ ತೊರೆಯುವ ಮುನ್ನ
ನನ್ನ ಈ ಆಕೃತಿ ಪ್ರಕೃತಿಯೊಂದಿಗೆ ಲೀನವಾಗಿರಲಿ

Sunday, January 18, 2009

ಅನಂತಾನಂತ ನಮನ


ರಾಜು ಸಾವಿನ ಸುದ್ದಿ ಸುಳ್ಳಾಗಲಿ ಎಂದು ತಾಯಿ ಶಾರದೆಯ ಫೋಟೊ ನೋಡುತ್ತಾ ಬಹುಶಃ ಶನಿವಾರ ನಾನು ಕರೆ ಮಾಡಿದಾಗ ಎಲ್ಲರ ಬಾಯಲ್ಲೂ ಬರುತ್ತಿದ್ದದ್ದು ಒಂದೇ ವಾಕ್ಯ. "ಛೇ ಸಾವು ಬರಬಾರದಿತ್ತು. ಇದು ಸಾಯುವ ವಯಸ್ಸಲ್ಲ". ಬೆಂಗಳೂರಿನ ಮಿತ್ರರು ರಾಜು ಸಾವಿನ ಬಗ್ಗೆ ಹೇಳುತ್ತಿದ್ದರೆ, ಇತ್ತ ಕಣ್ಣಾಲಿಗಳು ತುಂಬಿ ಬಂದಿತ್ತು.

ರಾಜು ಅನಂತ ಸ್ವಾಮಿ s/o ಮೈಸೂರು ಅನಂತಸ್ವಾಮಿ(ದೊರೈ) ನನ್ನ ಗೆಳೆಯನಲ್ಲ, ಬಂಧುವಲ್ಲ, ನೆಂಟನಲ್ಲ, ಕನಿಷ್ಠ ಆತನನ್ನು ನೋಡಿರುವುದು ಒಂದೆರಡು ಬಾರಿ ಅಷ್ಟೇ. ಆದರೆ ಅವನ ಹಾಡಂತೆ 'ನೀ ನನ್ ಹಟ್ಟಿಗೆ ಬೆಳಕಾಗಿದ್ದೆ ರಾಜು. . .' ನಿತ್ಯ ತಂದೆ ಮಕ್ಕಳ ಗಾನಸುಧೆ ತುಂಗೆಯಂತೆ ನಮ್ಮ ಮನೆ ಮನದಲ್ಲಿ ಹರಿಯುತ್ತಿತ್ತು. ಆತನ ಕಂಠಸಿರಿ ಆತನನ್ನು ನನ್ನ ಆಪ್ತೇಷ್ಟರ ಸಾಲಿಗೆ ಸೇರಿಸಿತ್ತು. ಅದೆಷ್ಟೋ ಬಾರಿ ಮನನೊಂದಾಗ ರಾಜು ದನಿ ಕೇಳಿ ಸ್ವಯಂ ಸಾಂತ್ವನ ಹೇಳಿಕೊಂಡಿದ್ದು ಇದೆ.

ರಾಜು ಸಾವಿಗೆ ಕುಡಿತ ಒಂದು ಕಾರಣ ಅಷ್ಟೇ. ಆದರೆ ಇದು ಸ್ವಯಂಕೃತವೋ, ಸಹವಾಸ ದೋಷವೊ, ದುರ್ವಿಧಿಯೋ ಒಟ್ಟಿನಲ್ಲಿ ಆತನ ಸಾವು ಇಡೀ ಸಂಗೀತ ಲೋಕದ ದುರಂತಗಳಲ್ಲಿ ಒಂದು. ನನ್ನಂತಹ ಸಾಧಾರಣ ಅಭಿಮಾನಿಗಳಿಂದ ಹಿಡಿದು, ಆತನಿಂದ ಸಂಗೀತದ ಓನಾಮ ಕಲಿತ ಎಲ್ಲರ ಪಾಲಿಗೆ ಗುರುವಾಗಿ, ಹಸನ್ಮುಖಿ ಗೆಳೆಯನಾಗಿ ರಾಜು ಸದಾ ಸ್ಮರಣೀಯ.

ಇಂದಿಗೂ ನಮ್ಮಡೆಯಲ್ಲಿ ಅತ್ರಿ ಸಾವಿನ ಸೂತಕ ಕಳೆದಿಲ್ಲ. ಆಗಲೇ ರಾಜು ಅಗಲಿಕೆ ಆಘಾತಕಾರಿಯಾಗಿದೆ. ಅದರಲ್ಲೂ ರಾಜು ಅವರ ತಾಯಿ, ಅಜ್ಜಿ ಈ ಆಘಾತವನ್ನು ಹೇಗೆ ಸಹಿಸುತ್ತಿದ್ದಾರೆ ಎಂದು ನೆನೆದರೆ ದೇವರ ಮೇಲೆ ಮುನಿಸಾಗುತ್ತದೆ.

ರಾಜು ಬೆಳೆಸಿದ ಶಿಷ್ಯಂದಿರಲ್ಲಿ ಆತನ ಪ್ರತಿಭೆಯನ್ನು ಕಾಣುವ ಪ್ರಯತ್ನ ಪಡಬಹುದಾದರೂ, ಅನಂತಸ್ವಾಮಿ, ರಾಜು ಪರಂಪರೆ ಪೂರ್ಣವಾಗಿ ಇತಿಹಾಸದ ಪುಟ ಸೇರಲಿದೆ ಎಂಬ ಅರಗದ ಸತ್ಯ ಸದಾ ಕಾಡುತ್ತಿರುತ್ತದೆ. ಸಾವೇ ನೀನೇಷ್ಟು ಘೋರ...ನಿನಗಿದೋ ನನ್ನ ಧಿಕ್ಕಾರ...

Saturday, August 23, 2008

ಕೆಲವು ಹನಿಗಳು

ಕೆಲ ಎಸ್ಎಂಎಸ್ ಸಂದೇಶದ ಭಾಷಾಂತರ....

ಜೀವನವಾಗಿದೆ ಈಗ ಗಲೀಜಾದ ಕಾಗದ
ಉರಿಸಲಾರರು ಯಾರು ಇದನು ಯಾರು
ಬರೆಯಲಾರರು ಯಾರು ಇದರ ಮೇಲೆ
ಈ ರೀತಿಯ ಬದುಕು ನಂದಾಗಿದೆ
ಸತಾಯಿಸುವವರಿಲ್ಲ, ಓಲೈಸುವವರಿಲ್ಲ ನನ್ನ
********************
ಅರಿಯದಂತೆ ಆಗಿಹೋದ ನೀ ಮನಕೆ

ಮೇಘಗಳ ನಡುವಲ್ಲಿ ನಸುಳಿ ಬಂದ ಸೌದಾಮಿನಿ
ಕಣ್ಣಹನಿಗಳೆರಡು ಉದುರುವ ಅಂತರದಲ್ಲಿ
ಬೀಸಿದ ಪ್ರಾಣವಾಯುವಿನ ತೆರದಿ
ಸುಳಿ ಸುಳಿದಾಡಿ,ಮನಕೆ ಮುದ ನೀಡಿ ನಲಿದಾಡಿ
ಮತ್ತೆ ಮತ್ತೆ ನೆನಪ ರಾಶಿ ಹೊತ್ತು ತರುವ ತಂಗಾಳಿ ನೀ

ಅರಿಯದಂತೆ ಆಗಿಹೋದ ನೀ ಮನಕೆ

ಕಾಯುವುದು ತರವೇ ನಿನಗೆ ನಾನು,
ಎಂದಿನಂತೆ ಬಾರದೇ ಹೋಗುವೆ ನೀನು

ಅರಿಯದಂತೆ ಆಗಿಹೋದ ನೀ ಮನಕೆ
ಪ್ರಶ್ನಾತೀತವಾಗಿ ಉಳಿದೆ ನನಗೆ
*********
ನನ್ನ ಇನಿಯ ತೊರೆದನು ನನ್ನ ಕೆಲ ಕ್ಷಣ
ದೂರಾಗಿ ಸನಿಹವಾದ ಎಂದಿತು ಮನ
ಅವನ ನೆನೆಯದೇ ಇರದ ಕ್ಷಣವೂ ಕ್ಷಣವಲ್ಲ
ಹೃದಯದಿ ನೆಲೆಸಿಹ ಅವನು ನನಗೆ ಕ್ಷಣಿಕವಲ್ಲ

Saturday, April 12, 2008

ಮಳೆ ನಿಂತು ಹೋದ ಮೇಲೆ ಹನಿ ಎರಡು ಉದುರಿದೆ

Dr.Rajtejaswi
ಮೋಜಿನ ಮಳೆ ನಿಂತು ಆಗಲೇ ನಾಲ್ಕೈದು ದಿನವಾಯ್ತು. ಆದರೆ ಈ ವಾರ ಅಂತಹ ಸಂಭ್ರಮವಿಲ್ಲ. ಮಧ್ಯದಲ್ಲಿ ಯುಗಾದಿ ಹಬ್ಬ , ಹೋಳಿಗೆ ಊಟ ಮೆದ್ದಿದ್ದು ಬಿಟ್ಟರೆ.

ಬಾಕಿಯಂತೆ ಏ.೫ ರಿಂದ ಏ ೧೨ ರ ವರೆಗೂ ಮನಸ್ಸಿಗೆ ಇಬ್ಬರನ್ನು ನೆನೆಯದೇ ಇರಲು ಸಾಧ್ಯವಾಗುವುದಿಲ್ಲ. ನೆಚ್ಚಿನ ಗುರು, ಮಾರ್ಗದರ್ಶಿ ತೇಜಸ್ವಿ , ನಾಡಿನ ಸಾಂಸ್ಕೃತಿಕ ಸಂಕೇತ ಡಾ. ರಾಜ್ ಕುಮಾರ್.

ತೇಜಸ್ವಿ ನಿರುತ್ತರದಲ್ಲಿ ಕವಿದ ಮೋಡ ಚದುರಿ ಮಳೆ ಸುರಿಸಿ, ಹರುಷವನ್ನು ಅರಿಸಿ ಸಾಗುತ್ತಿದೆ. ರಾಜ್ ನೆನಪಿನಲ್ಲಿ ಸ್ಮಾರಕ ಎಂಬ ನೆಪದಲ್ಲಿ ರಾಜ್ ಅವರ ಕನಸುಗಳು ಕಮರುತ್ತಿದೆ. ಈ ಇಬ್ಬರು ಸರಳ ಜೀವಿಗಳು ಇಂದಿನವರ ಜಂಜಾಟವನ್ನು ನೋಡುತ್ತಿದ್ದರೆ ಖಂಡಿತಾ ಖಾರವಾಗಿ ಪ್ರತಿಕ್ರಿಯಿಸುತ್ತಿದ್ದರು ಎನಿಸುತ್ತದೆ.

ಸ್ಮಾರಕ ನಿರ್ಮಾಣ, ಅರ್ಥವಿಲ್ಲದ ಆಚರಣೆಗೆ ತೇಜಸ್ವಿಯಂತೂ ವಿರೋಧಿಸುತ್ತಿದ್ದರು. ರಾಜ್ ಅವರು ಜೀವನದುದ್ದಕ್ಕೂ ಸರಳತೆಯನ್ನು ಮೈಗೂಡಿಕೊಂಡು ಬೆಳೆದವರು. ನಗರದಲ್ಲಿದ್ದರೂ ಸದಾ ಹಳ್ಳಿಮನೆಯ ವಾಸ್ತವ್ಯಕ್ಕಾಗಿ ಹಾತೊರೆಯುತ್ತಿದ್ದ ಜೀವ.

ತೇಜಸ್ವಿ ನಿಸರ್ಗದ ರಮಣೀಯತೆಗೆ ಸೋತು, ಪ್ರಕೃತಿಯ ಮಡಿಲಲ್ಲಿ ಸಾಧನೆ, ಸಂಶೋಧನೆ ಮಾಡುತ್ತಾ, ಮುಗ್ಧ ಜನರೊಡನೆ ಬೆರೆತು ಸಾರ್ಥಕ ಬದುಕು ಬಾಳಿದವರು. ಈ ಎರಡು ಚೇತನಗಳಲ್ಲಿ ನಾನು ಇಷ್ಟಪಡುವುದು ಸರಳತೆ ಹಾಗೂ ಜೀವನ ಪ್ರೀತಿ, ಉತ್ಸಾಹ.

ಇವರಿಬ್ಬರ ಚಿಂತನೆಗಳು ಸ್ಮಾರಕಕ್ಕೆ ಸೀಮಿತವಾಗದೇ ಅವರ ಸಾಧನೆ, ಜೀವನ ಪ್ರೀತಿ ಎಲ್ಲರಲ್ಲೂ ಆಸುಹೊಕ್ಕದರೆ ಎಷ್ಟು ಸುಂದರ. ಅದ್ಭುತ ಮಾಯಾಲೋಕದ ಕನಸು ಕಣ್ಮುಂದೆ ಕಾಣಿಸುತ್ತಿದೆ. ವಿರಮಿಸುತ್ತೇನೆ ಸದ್ಯಕ್ಕೆ.

Thursday, April 3, 2008

ಮಳೆ ನಿಲ್ಲದೇ ಮನದಿ ನೂರಾರು ಲಹರಿ ಮೂಡಿಸಿದೆ ..

ಮುನಿಸು ತರವೇ ಮಳೆಯ ಮೇಲೆ?... ಮುಂದುವರೆದು..

ಮಳೆ ನಮ್ಮ ಬದುಕಿನ ಅವಿಭಾಜ್ಯ ಅಂಗ. ಮಳೆ ಬಗ್ಗೆ ನೂರಾರು ಕವಿಗಳು, ಸಾಹಿತಿಗಳು, ಸಾವಿರಾರು ಲೇಖನಗಳನ್ನು ಬರೆದಿರಬಹುದು.
ಆದರೆ ಕಲ್ಪನೆಯ ಚಿತ್ರಣವೆ ಬೇರೆ ವಾಸ್ತವದ ಅನುಭವವೇ ಬೇರೆ.

ಋತುಮಾನದ ಏರುಪೇರು ಜನರ ಜೀವನದಲ್ಲಿ ಅನೇಕ ತಿರುವುಗಳನ್ನು ತರುವುದನ್ನು ಕಂಡಿದ್ದೇನೆ. ಅಕಾಲಿಕ ಮಳೆಯಿಂದ ಮನೆಹಾನಿ, ಬೆಳೆಹಾನಿ ಮಾಮೂಲಾಗಿ ಹೋಗಿದೆ.

ಬೆಳೆದು ನಿಂತ ಫಸಲು ಭೂಮಿ ಪಾಲಾದಾಗ, ಒಬ್ಬ ತಂದೆಗೆ ಬೆಳೆದು ನಿಂತ ಮಗನನ್ನು ಕಳೆದುಕೊಂಡ ದುಃಖದಂತೆ ನಿರಂತರವಾದ ನೋವನ್ನು ನೀಡುತ್ತದೆ.

ಇದಕ್ಕೆ ಪರಿಹಾರ? ಸರ್ಕಾರ ಕೊಡುವ ಕನ್ನಡಿಯೊಳಗಿನ ಗಂಟನ್ನು ನೆಚ್ಚಿಕೊಂಡರೆ ಯಾವ ಪ್ರಯೋಜನವೂ ಆಗುವುದಿಲ್ಲ. ಬದಲಿಗೆ ಮನಬಂದಂತೆ ಬದಲಾಗುವ ಪ್ರಕೃತಿಗೆ ಹೊಂದಿಕೊಳ್ಳುವುದೇ ಸರಿ. ಬಿತ್ತನೆಯಿಂದ ಹಿಡಿದು ಫಸಲು ಬರುವ ತನಕ ಈಗಿನ ಋತುಮಾನಕ್ಕಿಂತ ಕೊಂಚ ಮುಂಚಿತವಾಗಿ ಎಲ್ಲಾ ಕೆಲಸವನ್ನು ಪ್ರಾರಂಭ ಮಾಡಿದರೆ ಒಳಿತೆನಿಸುತ್ತದೆ.

ನಮ್ಮ ಬೇಸಾಯ ಪದ್ಧತಿಯನ್ನು ಈ ತಿಕ್ಕಲು ಮಳೆಗೆ ಹೊಂದಿಸಿಕೊಂಡು ಅದರೊಡನೆ ಆಟವಾಡುವ ಆಸೆಯಾದರೂ, ಅಂದುಕೊಂಡಿದ್ದು ಘಟಿಸದಿರೆ, ಚಿಂತನೆಗೆ ಫಲವಿಲ್ಲ ಎಂಬ ಭಯ ಕಾಡುತ್ತದೆ.

ಆದರೆ ನಮ್ಮ ಹವಾಮಾನ ಇಲಾಖೆ ಕೊಂಚ ಶ್ರಮವಹಿಸಿ ಮಣ್ಣ ಮಕ್ಕಳಿಗೆ ಸರಿಯಾದ ಮುನ್ಸೂಚನೆ ನೀಡಿದರೆ ಸಾಕು. ರೇಡಿಯೊಗೆ ಕಿವಿ ಆನಿಸಿಕೊಂಡು ಹವಾಮಾನ ವರದಿ ಕೇಳುತ್ತಿದ್ದದ್ದು ನೆನಪಾಗುತ್ತದೆ.

ಅದು ಹಾಗಿರಲಿ, ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಊರೆಂಬ ನಾಲ್ಕು ಮನೆಗಳ ಸಂಸಾರ ವರ್ಷಗಳು ಉರುಳುವುದರಲ್ಲಿ ಇಲ್ಲವಾಗಿ ಹರಿದು ಹಂಚಿಹೋಗುತ್ತದೆ. ಇದನ್ನೆಲ್ಲಾ ನೆನೆದಾಗ ನೋವಾಗುತ್ತದೆ.

ಹೊರಗಡೆಯಿಂದ ಅಪ್ಪ ಮನೆಗೆ ಬಂದು'ಇವತ್ತು ಕುಂಚೆಬೈಲು ಭಟ್ಟರ ಮನೆ ಆಕಳು ಮಳೆ ಹೊಡೆತಕ್ಕೆ ಸಿಕ್ಕಿತಂತೆ, ಗೌಡ್ರ ಆಳು ಲಕ್ಕ ಸಂಸಾರ ಸಮೇತ ಗುಳೆ ಹೊರಟಿದೆಯಂತೆ' ಎಂದೆಲ್ಲಾ ಹೇಳುವಾಗ ಮನದಿ ಮೂಡುವ ಮೊದಲ ಪ್ರಶ್ನೆ ನಮ್ಮ ಸರದಿ ಯಾವಾಗ? ನೆನೆದರೆ ಮೈ ಜುಂ ಎನ್ನುತ್ತದೆ.

ಚಿಕ್ಕಂದಿನಿಂದ ಆಡಿ ಬೆಳೆದ ಮನೆಯನ್ನು ತೊರೆಯುವುದೂ ಒಂದೇ. ಶಾಂತವಾದ ತುಂಗೆಯ ಪ್ರವಾಹಕ್ಕೆ ತಲೆ ಒಡ್ಡುವುದೂ ಒಂದೇ. ಇದನ್ನೆಲ್ಲಾ ನೋಡಿದರೆ ಕಣ್ಣಾಲಿಗಳು ತುಂಬಿ ಬರುತ್ತವೆ.

ಹೌದು, ಬೇಸಿಗೆ ಒಂದು ರೀತಿ ಸಂಭ್ರಮಕ್ಕೆ ನೂರಾರು ರೀತಿ ಹೇಳಿಕೆಗೆ, ಊಟದ ಮನೆಗಳಿಗೆ ತಿರುಗುವ ಕಾಲ. ಈಗಿನ್ನೂ ಶಿಶಿರ ಕಳೆದಿಲ್ಲ. ಸಂಭ್ರಮಕ್ಕೆ ತೆರೆ ಎಳೆದಂತೆ ಆಗಲೇ ಮಳೆರಾಯ ಮನೆಗೆ ಬಂದು ಕುಳಿತರೇ, ಬೇಡದ ಅತಿಥಿಯನ್ನು ಯಾರು ತಾನೇ ಶಪಿಸುವುದಿಲ್ಲ ಹೇಳಿ.

ಆದರೆ ದೂರದ ನಗರವಾಸಿಗಳು ಎಲ್ಲಾ ಸೌಲಭ್ಯಗಳಿದ್ದು, ಎಂದೋ ಸುರಿವ ಎರಡು ಮೂರು ದಿನಗಳ ಮಳೆಗೆ ಬೆಚ್ಚಿ ವರ್ಣಿಸುವ ರೀತಿ ಅಸಹನೀಯವೆನಿಸುತ್ತದೆ.(ಇತ್ತೀಚೆಗೆ ರಾಜಧಾನಿಯಿಂದ ಶಂಕರನ ಪಟಾಲಂ ಬಂದಿದ್ದಾಗ ಮಳೆಯನ್ನು ಅವರ ಜೀವನದ ವಿಲನ್ ರೀತಿಯಲ್ಲಿ ಚಿತ್ರಿಸುತ್ತಿದ್ದನ್ನು ಕಂಡು ಹೇಳಿದೆ ಅಷ್ಟೆ)

ಮಳೆಯಲ್ಲಿ ನೆಂದು, ತೊಯ್ದು ಕನಿಷ್ಠ ಅನುಭವವಿಲ್ಲದ ಜನ ಮಳೆಬಗ್ಗೆ ಉಪನ್ಯಾಸ ನೀಡುವಾಗ ರೇಜಿಗೆ ಎನಿಸುತ್ತದೆ. ಪ್ರಕೃತಿಯೊಡನೆ ಹೊಂದಾಣಿಕೆ ಮಾಡಿಕೊಂಡು ಬದುಕುವುದು ಬೇರೆ. ಪ್ರಕೃತಿಯ ವೈಪರೀತ್ಯ ಎದುರಿಸಿ ಅದನ್ನು ಮೆಟ್ಟಿ ನಿಲ್ಲುವುದು ಬೇರೆ.

ಈ ವಿಷಯದಲ್ಲಿ ನಾ.ಡಿಸೋಜರ ಪಾತ್ರಧಾರಿ ನಾಗಿ(ದ್ವೀಪ ಚಿತ್ರದಲ್ಲಿ) ಗುರುವೇ ಸರಿ. ಸಂಕಲ್ಪ ಸ್ಥಿರವಾಗಿದ್ದರೆ ಪ್ರಕೃತಿ ನಮ್ಮ ಕೈಹಿಡಿತದಲ್ಲಿರುತ್ತದೆ. ಪರಿಸರದೊಡನೆ ಬೆರೆತು ನಮ್ಮ ಆಣತಿಯಂತೆ ಅದನ್ನು ರೂಪಿಸಿಕೊಳ್ಳುವ ಜಾಣ್ಮೆ ಅರಿತರೇ ಬದುಕಲ್ಲಿ ಯಾವುದೂ ಅನಿಷ್ಟವಲ್ಲ, ಅಕಾಲಿಕ ಕಷ್ಟವಲ್ಲ.

ಮತ್ತೊಮ್ಮೆ ಮಳೆ ಬಂದಾಗ ಮನಸೋ ಇಚ್ಛೆ ನೆನೆದು ನೋಡಿ ಅದರ ಮಜಾನೇ ಬೇರೆ, ಆಗ ತಿಳಿಯುತ್ತೆ ಅದರ ಗಮ್ಮತ್ತು. (ಜ್ವರ ಬಂತೆಂದು ಬೈಯಬೇಡಿ ಮತ್ತೆ) ನಾನಂತೂ ಪೆನ್ನು ಕೆಳಗಿಟ್ಟು ಅಂಗಳಕ್ಕೆ ಇಳಿಯುತ್ತಿದ್ದೇನೆ. ಮಳೆ ನಿಲ್ಲುವವರೆಗೂ ನಿರಂತರ ಮೋಜಿನಾಟ.....

ಮುನಿಸು ತರವೇ ಮಳೆಯ ಮೇಲೆ?

"ಮಳೆ ಎಂದರೆ ಹಾಗೆ. ಮನಸ್ಸಿನಲ್ಲಿ ನೂರಾರು ಭಾವನೆಗಳ ಲಹರಿಯನ್ನು ತರುತ್ತದೆ. ಬಹುದಿನ ಕಾಲ ನನ್ನ ಬರವಣಿಗೆಗೆ ಬ್ರೇಕ್ ಹಾಕಿದ್ದು, ಪುನಃ ಬರೆಯಲು ಪ್ರೇರಣೆ ನೀಡುತ್ತಿರುವುದು ಈ ಮಳೆಯೇ"

"ಥೂ ಅನಿಷ್ಟ.. ಎಲ್ಲೇ ಹೋದರೂ ಹಾಳಾದ್ದು.. ಇದು ನನ್ನ ಬಿಡೋ ಹಾಗೆ ಕಾಣೋದಿಲ್ಲ. ಏನು ಪಿರಿಪಿರಿಯಪ್ಪಾ ಇದರದ್ದು" ಎಂದು ಬೆನ್ನಿಗಂಟಿದ್ದ ಮಕ್ಕಳನ್ನು ಗದುರುವಂತೆ ಗದರುತ್ತಾ ಕೊಡೆ ಮಡಚಿ ಒಳ ಬಂದ ನಂತರವೂ ಅವನ ಮಾತು ಮುಂದುವರೆದಿತ್ತು. ಇಲ್ಲದವರಿಗೆ ಅಭಾವ ವೈರಾಗ್ಯ, ಇದು ಒಂಥರಾ ಅಗಾಧ ವೈರಾಗ್ಯ" ಎನ್ನುತ್ತಾ ತಲೆ ಕೊಡವುತ್ತಾ ಅಜ್ಜನ ರೀತಿ ಕೂತ.

ಹೊಸಬರೂ ಯಾರೋ ಬಂದ್ರು ಈ ಮಳೇಲಿ ಎಂದುಕೊಳ್ಳುತ್ತಾ ನಾನು ಪಡಸಾಲೆಗೆ ಬಂದು ನೋಡಿದೆ. ಶಂಕರನ ಸ್ಥಿತಿ ಕಂಡು ನಗುತ್ತಾ ಹೇಳಿದೆ

'ಏನು ಇವತ್ತು ರಾಯರು ತುಂಬಾನೇ ಬೇಜಾರಲ್ಲಿರುವಂತಿದೆ" ಏನಾಯ್ತಪ್ಪ ಅಂತದ್ದು..

"ಬೇಜಾರಂತೆ ಬೇಜಾರು, ಬೆಂಗ್ಳೂರು ಬಿಟ್ಟಾಗ ಶುರುವಾಗಿದ್ದು. ಇಲ್ಲಿಗೆ ಬಂದು ಎರಡು ದಿನ ಆಯ್ತು ಇನ್ನು ನಿಂತಿಲ್ಲ. ನಿಲ್ಲೋ ಹಾಂಗೂ ಕಾಣಲ್ಲ ಬಿಡು. ನಾನು ಎಷ್ಟು ಮಳೆ ನೋಡಿಲ್ಲ. ಇದು ಯಾಕೋ ಸರಿಯಿಲ್ಲ. ಅಪ್ಪಯ್ಯ ಹೇಳ್ತಿದ್ದ ಈ ಅಕಾಲದ ಮಳೆ ನಮ್ಮನ್ನು ಹಾಳು ಮಾಡೋಕೆ ಬಂದಂತಿದೆ ಅಂತಾ"

ಅವನ ಧಾಟಿ ನೋಡಿದರೆ ೮೦ರ ಹರೆಯದ ನಮ್ಮಜ್ಜ ಮೈ ಮೇಲೆ ಬಂದಂತೆ ಕಾಣುತ್ತಿತ್ತು. ಅವನ ಬೆಂಗ್ಳೂರಿನ ಗೆಳೆಯರು ಮಳೆಯ ಬಗ್ಗೆ ದೂರುವ ಮಾತನ್ನು ಎಂದೂ ಆಡುತ್ತಿದ್ದ. ಆಗೆಲ್ಲಾ ಸುಮ್ಮನಿದ್ದೆ ಇವತ್ತು ಅವನನ್ನು ಕಿಚಾಯಿಸಲು ನಿರ್ಧರಿಸಿ ಹೇಳಿದೆ.

"ಅಕಾಲದ ಮಳೆ ನಿಜ ಆದರೆ ಹಾಳು ಮಾಡೋಕೆ ಅನ್ನೊದ್ದನ್ನಾ ನಾ ಒಪ್ಪಲ್ಲಬಿಡು" ಎಂದೆ..

ನನ್ನ ಉತ್ತರದಿಂದ ಸಂತುಷ್ಟಗೊಳ್ಳದೆ ಮುಂದುವರೆಸಿದ...

'ನೀನು ಬಿಡಕ್ಕ, ಯಾವಾಗಲೂ ಮಳೆ ಪರನೇ ದ್ವೀಪ ಫಿಲ್ಮಂ ನಲ್ಲಿನ ನಾಗಿ ಇದ್ದಂಗೆ, ಸದ್ಯಕ್ಕೆ ನಮ್ಮೂರಿಗೆ ನದಿ ಅಷ್ಟು ಹತ್ರಿಲ್ಲ ಪುಣ್ಯಕ್ಕೆ. ಕಡೆಗೆ ಎಲ್ಲಾ ನಮ್ಮ ಭೂತನಾಥನ ದಯೆ ಅನ್ನೋಕು ಯಾರಿಲ್ಲ ಎಂದು ಬದಲಿಗೆ' ನನ್ನೇ ಗೇಲಿ ಮಾಡತೊಡಗಿದ.

'ಹಾಂಗಲ್ಲ ನಾ ಹೇಳೋದು ಇಲ್ಲಿ ಕೇಳು ಮಳೆ ಬರುತ್ತೆ. ಹೋಗುತ್ತೆ. ಅದನ್ನು ಈಗ ಬಾ ಆಗ ಬಾ ಅಂತಾ ಹೇಳಿಕೆ ಕೊಟ್ಟು ಕರೀಲಿಕ್ಕೆ ಬರುತ್ತಾ ಹೇಳು. ಬಂದಾಗ ಅನುಭವಿಸಬೇಕು. ಎಲ್ಲಾ ಸರ್ತಿ ಮಳೆಯಿಂದ ಶುಭಾನೇ ಆಗುತ್ತೆ ಅಂದ್ರೆ ಹೇಗೆ, ಅಶುಭನೂ ಆಗುತ್ತೆ. ಅದಕ್ಕೆ ತಯಾರಿರಬೇಕು ಜೀವ. ಕಷ್ಟ, ಸಾವು ನೋವು ಹೇಗೆ ಹೇಳಿಕೇಳಿ ಬರೋದಿಲ್ಲ್ವೋ ಹಾಗೆ. ಅವು ಬರೋ ಸಮಯಕ್ಕೆ ನಾವು ತಯಾರಿರಬೇಕು ಅಷ್ಟೆ. ಎಷ್ಟು ಚೆಂದ ಉಂಟು ಮಳೆ. ಅದರ ರುಚಿನಾ ಆಸ್ವಾದಿಸಬೇಕು' ಅಂದೆ. ಜೋರಾಗಿ ನಗಾಡುತ್ತಾ...

'ಹಹ್ಹಹ್ಹಹ್ಹ. ರುಚಿ ಏನು ಬಂತು ಅಮಟೇ ಕಾಯಿ ತೊಟ್ಟು....ಮಳೆಯಿಂದ ಎಷ್ಟು ಊಟದ ಮನೆ ತಪ್ಪೋತು ಗೊತ್ತಾ' ಎಂದು ಮುಖ ಸಪ್ಪಗೆ ಮಾಡಿಕೊಂಡ.

ಹೋ.. ಹಾಗೇಳು ಮತ್ತೆ. ಛೆ ಪಾಪಾ. ಸರಿ ರುಚಿ ರುಚಿಯಾಗಿ ನಿಂಗೆ ಬೇಕಾದ್ದು ಮಾಡಿ ನಿನ್ನ ಹೊಟ್ಟೇನೇನೋ ತಂಪಾಗಿಸಬಹುದಪ್ಪಾ. ಆದ್ರೆ ನಿನ್ನ ಕಣ್ಣು ತಂಪಾಗಿಸೋಕೆ ಇಲ್ಲಿ ಯಾರನ್ನು ಕರೆತರೋದು ಗೊತ್ತಾಗುತ್ತಿಲ್ಲಪ್ಪ' ಎಂದು ನಕ್ಕೆ.

ಹೇ.. ನೀನೊಂದು... ಯಾವಾಗಲೂ ಕುಶಾಲು ನಿಂಗೆ.. ನಿಂಗೆ ಹಿರಿಯಪ್ಪ ರಚಿತ ಅಂತಾ ಹೆಸರಿಡೋ ಬದಲು ಕುಶಾಲಿ ಅಂಥಾ ಹೆಸರಿಡಬೇಕಿತ್ತು. ನಿಂಗೆ ಬೇಜಾರೇ ಆಗೋದಿಲ್ಲ ಕಾಣ್ದದೆ.

ಹ್ಞು...ಕಣಪ್ಪಾ ಹೆಸರು ಬದಲಿಸಿಬಿಡುವಾ ಬಿಡು..ತಡಿ ಬಂದೆ ಎಂದೇಳಿ ಒಳಹೋಗಿ...ಬಿಸಿಬಿಸಿ ಕಾಫಿ ತಂದು ಅವನ ಕೈಗಿತ್ತೆ.

ಹ್ಞಾ.. ಹೇಳೋದು ಮರೆತೆ ಮೊನ್ನೆ ಪೇಟೆಗೆ ಹೋಗಿದ್ದಾಗ.. ಮೇಗಿನ ಗದ್ದೆ ರಮೇಶ ಸಿಕ್ಕಿದ್ದ. ನಿನ್ನ ಗಳಸ್ಯ ಕಂಠಸ್ಯ...

'ಹೌದಾ..ಏನಂದಾ'

'ಅವನ ಜತೆ ಅವನ ತಂಗಿ ಸುರಜಾ ಇದ್ದಳು. ಊರಿಗೆ ಇವತ್ತೆ ಬಂದಿದ್ದು..ಮಳೆಯಿಂದ ಎಲ್ಲಿಗೂ ಕಾಲು ಬೆಳಸಲಿಲ್ಲ ಅಂಥಾ ಪೇಚಾಡುತ್ತಿದ್ದಳು ಪಾಪಾ

'ಹೌದಾ...ಏನಂದ್ಳು 'ಎಂದವನು ನಾಲಿಗೆ ಕಚ್ಚಿಕೊಂಡ...ಕುಡಿಯುತ್ತಿದ್ದ ಕಾಫಿ ಅನ್ನು ಚೆಲ್ಲಿಕೊಳ್ಳುತ್ತಾ...

ನನ್ನ ನಗು ಹೆಚ್ಚಾಯಿತು..

'ಸರಿ ಮಾರಾಯ್ತಿ ಇಲ್ಲೆ ಇದ್ದರೇ ಕಿಚಾಯಿಸ್ತಾನೇ ಇರುತ್ತೀಯಾ. ನಾನು ತೋಟಕ್ಕೆ ಕಡೆ ಹೋಗ್ತೀನಿ. ಹಿರಿಯಪ್ಪ ಸಿಗಬಹುದು ಅಲ್ಲಿ ಎಂದು ಎದ್ದು ನಿಂತ. ಕುಡಿದ ಕಾಫಿ ಲೋಟ ಬದಿಗಿಟ್ಟು.ಅಂಗಳಕ್ಕೆ ಜಿಗಿದ ನಡೆದ.

ಅವನು ಕೊಡೆ ಬಿಡಿಸಿ ಅಂಗಳಕ್ಕೆ ಹಾರಿದ ಅವನಿಗೆ ಹಳ್ಳದ ನೀರು ಹೆಚ್ಚಾಗಿದೆಯಂತೆ.. ಹುಷಾರು ಎನ್ನುತ್ತಾ...ಅವನು ನಡೆದ ಹಾದಿ ನೋಡುತ್ತಾ ನೆನಪಿನಾಳಕ್ಕೆ ಇಳಿದೆ......

ಮುಂದುವರೆದು.....ಮಳೆ ನಿಲ್ಲದೇ ಮನದಿ ನೂರಾರು ಲಹರಿ ಮೂಡಿಸಿದೆ ..

Sunday, February 17, 2008

ಬರವಣಿಗೆ ಅನಿವಾರ್ಯ ಕರ್ಮ

ಬರವಣಿಗೆ ಅನಿವಾರ್ಯ ಕರ್ಮ ಎನಿಸಿದ ಮೇಲೆ, ಬರೆದ ಅಕ್ಷರಗಳು ಮನತಣಿಸ ಹೋದರೆ ಸುಮ್ಮನೆ ಅದನ್ನು ಹೊರಗೆಡವುದರಲ್ಲಿ ಯಾವುದೇ ತೃಪ್ತಿ ಇರದು. ಯಾಕೊ ಮನಸ್ಸು ಒಮ್ಮೊಮ್ಮೆ ಖಾಲಿ ಖಾಲಿ ಎನಿಸಿಬಿಡುತ್ತದೆ.

ಯಾವ ವಿಷಯವೂ ರುಚಿಸದಂತೆ, ಎಲ್ಲದರಲ್ಲೂ ನಿರಾಸಕ್ತ ಭಾವ ಮೂಡಿದಂತೆ, ಏನನ್ನೊ ಹುಡುಕುತ್ತಾ, ಮತ್ತೇನನ್ನೊ ಪಡೆಯುತ್ತಾ, ನಡುವೆ ಇನ್ನೇನ್ನನೊ ಕಳೆದುಕೊಳ್ಳುವ ಈ ಜೀವನ ಎಂಬ ವಿಸ್ಮಯ ಪರಿಕ್ರಮಕ್ಕೆ ಸಾಷ್ಟಾಂಗ ನಮಸ್ಕಾರ ಹೇಳಬೇಕೆನಿಸುತ್ತದೆ.

ಬರವಣಿಗೆಗೆ(ಬರೆಯೋದಕ್ಕೆ) ಒಂದು ನೆಪ ಬೇಕೇ? ಎಷ್ಟೊ ಸಾರಿ ನನಗೆ ನಾನೇ ಕೇಳಿಕೊಂಡ ಪ್ರಶ್ನೆ. ಹಾಗಂತ ಅನಿಸಿದ್ದೆಲ್ಲದ್ದಕ್ಕೆ ಅಕ್ಷರ ರೂಪನೀಡುತ್ತಾ ಹೋದರೆ, ಮಿತಿಯಿರದ ಪುಟಗಳ ಲೆಕ್ಕಾಚಾರದಲ್ಲಿ ಕಳೆದುಹೋಗುವ ಭಯ ಕಾಡುತ್ತದೆ. ಹೌದು ಮನುಷ್ಯನಿಗೆ ಭಯ ಯಾಕಾದರೂ ಕಾಡುತ್ತದೆ.

ಏನಾದರೂ ತಪ್ಪು ಮಾಡಿದಾಗ, ತಪ್ಪು ಮಾಡೋದು ಯಾವಾಗ ಮನಸ್ಸಿನಲ್ಲಿ ಕೆಟ್ಟ ಅಲೋಚನೆ ಉಂಟಾದಾಗ. ಒಂದು ಸಿದ್ಧಾಂತದ ಪ್ರಕಾರ 'ಮನಸ್ಸಿನಲ್ಲಿ ಉಂಟಾಗುವ ಕೆಟ್ಟ ಅಲೋಚನೆಗಳಿಗೆ ಮೂಲ ಕಾರಣವೇ ಭಯ ಅಂತೆ' . ಭಯ ಅಥವಾ ಯಾವುದೇ ಫೋಬಿಯಾ ಬಗ್ಗೆ ವಿಸ್ತಾರವಾಗಿ ಬರೆದು ನಿಮಗೆ ಭಯ ಹುಟ್ಟಿಸುವುದಿಲ್ಲ ಬಿಡಿ.

ಮನಸ್ಸಿನಲ್ಲಿ ಬರುವ ಕಲ್ಪನೆ, ಕನಸಾಗಿ, ಕನಸು ಪದಗಳಾಗಿ, ಪದಗಳು ಪ್ಯಾರಗಳಾಗಿ ದೊಡ್ಡ ಲೇಖನವಾಗಿ ಸಾವಿರಾರು ಜನ ಓದಿ, ಅದರಿಂದ ಎಲ್ಲರ ತಲೆಯಲ್ಲೂ ಉಂಟಾಗುವ ಅಥವಾ ಬರುವ ನಾನಾ ಆಲೋಚನೆಗಳ ಜಾಲದೊಳಗೆ ಬಂಧಿತಳಾದ ಮೇಲೆ ಬರೆಯದೇ ಸುಮ್ಮನೆ ಕೂತರೆ ನಾನಾ ಓದುಗರ ವಿಭಿನ್ನ ಆಲೋಚನಾ ಕ್ರಮಕ್ಕೆ ಧಕ್ಕೆ ಉಂಟು ಮಾಡಿದಂತೆಯೇ ಸೈ.

ಎಲ್ಲಾ ಓದುಗರ ಸ್ತರಕ್ಕೆ ಮುಟ್ಟಲಾಗದಿದ್ದರೂ 'ಇವರು ಇಂದು ನೋಡಿದ್ದಾರೆ ಈ ಲೇಖನನಾ', 'ಅವರು ಏನೋ ನಾಲ್ಕು ಸಾಲು ಬರೆದಿದ್ದಾರೆ ಇದರ ಬಗ್ಗೆ' ಅನ್ನೊ ಸಣ್ಣ ಖುಷಿ, ಉತ್ಸಾಹವೇ ಮುಂದಿನ ಪ್ರತಿ ಲೇಖನಕ್ಕೆ ನಾಂದಿ ಹಾಡುತ್ತದೆ ಎನ್ನುವುದು ಸುಳ್ಳಲ್ಲ.

ಹಾಗೆ ನೋಡಿದರೆ ನಮ್ಮ ಪ್ರತಿಯೊಂದು ಕ್ರಿಯೆಯ ಫಲಿತಾಂಶ ಅಡಕವಾಗಿರುವುದು ಅದರ ಹಿಂದಿನ ಪ್ರೇರಕ ಶಕ್ತಿಯಿಂದ, ಉತ್ಸಾಹದಿಂದ. ಉತ್ಸಾಹ/ಲವಲವಿಕೆ ಇದ್ದರೆ ಶ್ರದ್ಧೆ ಮೂಡುತ್ತದೆ. ಶ್ರದ್ಧೆ ಬಂದರೆ ಜ್ಞಾನ ಸಿಗುತ್ತದೆ. ಒಮ್ಮೆ ಜ್ಞಾನಿಯಾದ ಮೇಲೆ ಅವನಿಗೆ ಕರ್ಮದ ಯಾವುದೇ ಬಂಧನವಿರುವುದಿಲ್ಲ.

ಹಾಗಂತ ಪಡೆದ ಜ್ಞಾನವನ್ನು ಹಂಚದೆ ಹೋದರೆ, ಅದು ತಪ್ಪಾಗುತ್ತದೆ. ಒಟ್ಟಿನಲ್ಲಿ ಸೂಕ್ಷ್ಮವಾಗಿ, ಸ್ಥೂಲವಾಗಿ ಹೇಳಬೇಕೆಂದರೆ, ತಿಳಿದಿದ್ದನ್ನು ತಿಳಿಯದವರಿಗೆ ತಿಳಿ ಹೇಳೋ ಕಾಯಕನಾ ಜೀವನ ಪರ್ಯಂತ ಮುಂದುವರೆಸುವುದರಲ್ಲೇ ಇದೆ ನಿಜವಾದ ಆನಂದ.

ಹ್ಞು...ಇಷ್ಟೆಲ್ಲಾ ಪೀಠಿಕೆ ಯಾಕಾದರೂ ಬರೆದೆ ಎಂದು ಒಮ್ಮೆ ಅವಲೋಕಿಸಿದಾಗ ಕಾಣುವುದು ಒಂದೇ. ಬ್ಲಾಗ್ ಅಂಥಾ ಒಂದು ಸೃಷ್ಟಿ ಮಾಡೋದು ಮುಖ್ಯ ಅಲ್ಲ ಅದನ್ನು ಸಾಕಿ ಸಲುಹುವುದು ಕೂಡ ಅಷ್ಟೇ ಮುಖ್ಯ ಅಂತಾ. ಸಹೃದಯ ಮಿತ್ರರ ಆಣತಿಯಂತೆ ಉಪವಾಸ ಮುಗಿಸಿ ಮತ್ತೆ ಅಕ್ಷರದೊಡನೆ ಕಾದಾಟಕ್ಕೆ ಸಿದ್ಧಳಾಗುತ್ತಿದ್ದೇನೆ. ಸ್ವಲ್ಪ ಬಿಡುವು ಕೊಡಿ..........(ಅರೆ..ಬಿಡುವು ಯಾರನ್ನು ಕೇಳುತ್ತಿದ್ದೇನೆ..ಯಾವುದರಿಂದ ಅಂಥಾ ಒಮ್ಮೆ ನಗು ಬಂತು.. ಕ್ಷಮಿಸಿ)

ಸುಮ್ಮನೆ ಕಾಲಹರಣಕ್ಕೆಂದು ಗೀಚಿದ ಸಂಚಾರ ವಾಣಿಯಲ್ಲಿ ಕಂಡ ನಾಲ್ಕಾರು ಎಸ್ಸೆಎಂಎಸ್ ಸಂದೇಶಗಳ ಕನ್ನಡೀಕರಣ ಸಾಲುಗಳು ನೀಡುತ್ತಿರುವೆ. ಕ್ಷಮಿಸಿ ಇವು ಯಾವುದು ಸ್ವಂತದಲ್ಲ. ಗೆಳೆಯ ಕಳಿಸಿದ ಪರಭಾಷೆಯ ಸಂದೇಶದ ಕನ್ನಡರೂಪ ಅಷ್ಟೇ.

ನನ್ನ ಇನಿಯ ತೊರೆದನು ನನ್ನ ಕೆಲ ಕ್ಷಣ
ದೂರಾಗಿ ಸನಿಹವಾದ ಎಂದಿತು ಮನ
ಅವನ ನೆನೆಯದೇ ಇರದ ಕ್ಷಣವೂ ಕ್ಷಣವಲ್ಲ
ಹೃದಯದಿ ನೆಲೆಸಿಹ ಅವನು ನನಗೆ ಕ್ಷಣಿಕವಲ್ಲ
*********
ವಿರಕ್ತನಾಗಿ ಈ ಬದುಕಿನಿಂದ ನಾನು ಮುಕ್ತಿಹೊಂದಿದ ಮೇಲೆ
ನನಗೆ ಸಂದೇಶ ಕಳುಹಿಸದೆ ಈಗ ನೀನು ಉಳಿಸುತ್ತಿರುವ ಹಣದಿಂದ
ನನಗಾಗಿ ಶ್ವೇತ ಪುಷ್ಪಗಳ ಖರೀದಿಸಿ ಅರ್ಪಿಸು ಗೆಳೆಯ
*********
ನೆನ್ನೆಯ ತಪ್ಪುಗಳ ನಡುವೆ, ನಾಳೆಯ ಭರವಸೆಗಳ ನಡುವೆ
ಅವಕಾಶಗಳ ಮೂಟೆ ಹೊತ್ತು ಇಂದು ನಿಮ್ಮ ಮುಂದಿದೆ
ಈ ಅವಕಾಶವ ಜೀವನದಲ್ಲಿ ಸರಿಯಾಗಿ ಉಪಯೋಗಿಸಿಕೊಳ್ಳಿ.
*********
ಬರೆದೆ ನಿನ್ನ ಹೆಸರ ಮರಳ ಮೇಲೆ
ನೀರಿನ ಅಲೆ ಬಂದು ಕೊಚ್ಚಿ ಹೋಯ್ತು
ಬರೆದೆ ನಿನ್ನ ಹೆಸರ ಗಾಳಿಯ ಮೇಲೆ
ಬಿರುಗಾಳಿ ಬಂದು ತೂರಿ ಹೋಯ್ತು
ಕಡೆಗೆ ನಿನ್ನ ಹೆಸರ ಬರೆದೆ ನನ್ನ ಹೃದಯದಿ
ಪಾಪಿ! ನಿನ್ನ ಹೆಸರ ಬರೆದಿದ್ದಿದ್ದೆ ತಡ ಹೃದಯಬಡಿತ ನಿಂತೊಯ್ತು.
***********